ಉಳ್ಳಾಲ: ಮಂಗಳೂರಿನ ಸೋಮೇಶ್ವರ ಬೀಚ್ನಲ್ಲಿ ನೈತಿಕ ಪೊಲೀಸ್ಗಿರಿ ಪ್ರಕರಣಕ್ಕೆ ಸಂಬಂಧಿಸಿ ಇನ್ನೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ತಲಪಾಡಿ ನಿವಾಸಿ ಅಖಿಲ್ ಬಂಧಿತ ಆರೋಪಿ. ಪ್ರಕರಣ ಸಂಬಂಧ ಈವರೆಗೆ ಅಪ್ರಾಪ್ತ ಸೇರಿ ಐವರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬಸ್ತಿಪಡ್ಪು ನಿವಾಸಿ ಯತೀಶ್, ತಲಪಾಡಿ ನಿವಾಸಿಗಳಾದ ಸಚಿನ್ ಮತ್ತು ಸುಹಾನ್, ಅಖಿಲ್ ಸೇರಿ ಓರ್ವ ಅಪ್ರಾಪ್ತ ಅರೆಸ್ಟ್ ಆಗಿದ್ದಾರೆ.
ಐಪಿಸಿ ಸೆಕ್ಷನ್ 307 ಹಾಗೂ ಗಲಭೆ ಸೃಷ್ಟಿ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ. ಮತ್ತಷ್ಟು ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಸದ್ಯ ಮೂರು ಪ್ರತ್ಯೇಕ ತಂಡದಿಂದ ತನಿಖೆ ಮುಂದುವರಿಸಲಾಗಿದೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ವಿದ್ಯಾರ್ಥಿಗಳ ದೂರಿನಡಿ ಎಫ್ಐಆರ್ ದಾಖಲಾಗಿತ್ತು. ಅದರಂತೆ ಹಿಂದೂ ಸಂಘಟನೆಗೆ ಸೇರಿದ ಐವರು ಆರೋಪಿಗಳನ್ನು ಬಂಧಿಸಲಾಗಿದೆ.

ಪೊಲೀಸ್ ಕಮಿಷನರ್ ಭೇಟಿ: ಉಳ್ಳಾಲ ಪೊಲೀಸ್ ಠಾಣೆಗೆ ಮಂಗಳೂರು ಕಮಿಷನರ್ ಕುಲದೀಪ್ ಜೈನ್ ಭೇಟಿ ನೀಡಿದರು. ಸಿಸಿಬಿ ಎಸಿಪಿ ಪಿ.ಎ ಹೆಗ್ಡೆ ಹಾಗೂ ಉಳ್ಳಾಲ ಇನ್ಸ್ಪೆಕ್ಟರ್ ಅವರಿಂದ ಮಾಹಿತಿ ಪಡೆದರು. ಪ್ರಕರಣ ಗಂಭೀರ ಸ್ವರೂಪ ಪಡೆದ ಹಿನ್ನೆಲೆ ಕಮಿಷನರ್ ಠಾಣೆಗೆ ಭೇಟಿ ನೀಡಿದರು. ಮೂರು ಪೊಲೀಸ್ ತಂಡಗಳಿಗೆ ತನಿಖೆ ನಡೆಸುವಂತೆ ಸೂಚಿಸಿದ ಕಮಿಷನರ್ ಉಳಿದ ಆರೋಪಿಗಳ ಶೀಘ್ರ ಪತ್ತೆಗೆ ಆದೇಶಿಸಿದ್ದಾರೆ.
ಠಾಣೆಗೆ ಬಿಜೆಪಿ-ಹಿಂದೂ ಸಂಘಟನೆ ನಾಯಕರ ದೌಡು: ಅಮಾಯಕರ ಬಂಧನ ಎಂದು ಆರೋಪಿಸಿ ಉಳ್ಳಾಲ ಠಾಣೆಗೆ ಬಿಜೆಪಿ ಹಾಗೂ ಹಿಂದೂ ಸಂಘಟನೆ ನಾಯಕರು ಭೇಟಿ ನೀಡಿದರು. ಉಳ್ಳಾಲ ಠಾಣೆಗೆ ಆಗಮಿಸಿದ ಬಿಜೆಪಿ ನಾಯಕ ಸತೀಶ್ ಕುಂಪಲ ಹಾಗೂ ವಿಹೆಚ್ಪಿ ಹಾಗೂ ಭಜರಂಗದಳ ಮುಖಂಡರು ಕಮಿಷನರ್ ಕುಲದೀಪ್ ಜೈನ್ ಅವರನ್ನು ಭೇಟಿ ಮಾಡಿದರು. ಹಲವು ಅಮಾಯಕ ಹಿಂದೂ ಯುವಕರನ್ನು ಬಂಧಿಸಲಾಗಿದೆ. ತಕ್ಷಣ ಅವರನ್ನು ಬಿಡುಗಡೆಗೆ ಮಾಡಬೇಕು ಎಂದು ಒತ್ತಾಯಿಸಿದರು. ಪ್ರಕರಣದ ಆರೋಪಿಗಳನ್ನಷ್ಟೇ ಬಂಧಿಸುವ ಭರವಸೆ ನೀಡಿದ ಕಮಿಷನರ್ ಕುಲದೀಪ್ ಜೈನ್ ವಶಕ್ಕೆ ಪಡೆದವರು ಕೇಸ್ನಲ್ಲಿ ಇಲ್ಲದಿದ್ದರೆ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದರು.

ಕಮಿಷನರ್ ಭೇಟಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಬಿಜೆಪಿ ಮುಖಂಡ ಸತೀಶ್ ಕುಂಪಲ, “ಕಾಂಗ್ರೆಸ್ ಸರ್ಕಾರ ಬಂದ ಬೆನ್ನಲ್ಲೇ ಉಳ್ಳಾಲದಲ್ಲಿ ಅಹಿತಕರ ಘಟನೆ ನಡೆದಿದೆ. ಕಾಲೇಜಿನ ಅನ್ಯಕೋಮಿನ ವಿದ್ಯಾರ್ಥಿಗಳು ಸೋಮೇಶ್ವರ ಬೀಚ್ಗೆ ಬಂದಿದ್ದಾರೆ. ಪವಿತ್ರ ಕ್ಷೇತ್ರದಲ್ಲಿ ಅಶ್ಲೀಲವಾಗಿ ವರ್ತಿಸಿದಾಗ ಸ್ಥಳೀಯ ಯುವಕರು ಪ್ರಶ್ನೆ ಮಾಡಿದ್ದಾರೆ. ಇದು ತಪ್ಪಾದರೂ ದೇವರ ಕ್ಷೇತ್ರದ ಬಳಿ ಅಶ್ಲೀಲ ವರ್ತನೆ ಕಂಡು ಆಕ್ರೋಶ ಸಹಜ. ಏನೇ ಆದರೂ ಪೊಲೀಸ್ ಇಲಾಖೆ ಈ ಬಗ್ಗೆ ಗಮನ ಹರಿಸಲಿ. ಇಂತಹ ಘಟನೆಗಳಿಗೆ ಆಸ್ಪದ ನೀಡುವುದು ಬೇಡ. ಅಮಾಯಕರ ಬಂಧನ ಸರಿಯಲ್ಲ. ಅಮಾಯಕರನ್ನು ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ. ಯುವಕರು ನಮ್ಮ ಕಾರ್ಯಕರ್ತರಾ? ಅಥವಾ ಅಲ್ಲವ ಅನ್ನೋದು ಪ್ರಶ್ನೆ ಅಲ್ಲ. ಅವರ ಕುಟುಂಬದವರು ಬಂದು ಹೇಳಿದಾಗ ನಾವು ಠಾಣೆಗೆ ಬಂದಿದ್ದೇವೆ. ಎಲ್ಲ ವೈದ್ಯಕೀಯ ಕಾಲೇಜುಗಳ ಪ್ರಮುಖರ ಜತೆಗೆ ಮಾತನಾಡಿ ವಿದ್ಯಾರ್ಥಿಗಳಿಗೆ ಬುದ್ಧಿ ಮಾತು ಹೇಳುವ ಪ್ರಯತ್ನ ಮಾಡುತ್ತೇನೆ ಎಂದರು.
Discover more from Coastal Times Kannada
Subscribe to get the latest posts sent to your email.







Discussion about this post