ಕಾಸರಗೋಡು, ಜು. 2: ‘ಆಪರೇಷನ್ ತೂಫಾನ್’ ಎಂಬ ಕಾರ್ಯಕ್ರಮದ ಹೆಸರಿನಲ್ಲಿ ಸರ್ಕಾರಿ ಶಾಲೆಯ ಮೈದಾನದಲ್ಲೇ ಅಪಾಯಕಾರಿ ಕಾರು ರೇಸ್ ಆಯೋಜಿಸಿ ಸಾರ್ವಜನಿಕರ ಜೀವಕ್ಕೆ ಅಪಾಯ ತಂದೊಡ್ಡಿದ ಘಟನೆ ಕಾಸರಗೋಡಿನ ಪಳ್ಳಿಕ್ಕರದ ಸರ್ಕಾರಿ ಶಾಲೆ ಮೈದಾನದಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬೇಕಲ್ ಪೊಲೀಸರು ಆರು ಕಾರುಗಳನ್ನು ವಶಕ್ಕೆ ಪಡೆದು ಹಲವು ಯುವಕರನ್ನು ಬಂಧಿಸಿದ್ದಾರೆ.
ಶಾಲೆ ಬಿಡುವ ಸಮಯದಲ್ಲಿ ವಿದ್ಯಾರ್ಥಿಗಳು ಮನೆಗೆ ತೆರಳುತ್ತಿದ್ದಾಗ ಶಾಲಾ ಆವರಣದಲ್ಲಿ ವೇಗವಾಗಿ ಕಾರುಗಳನ್ನು ಚಲಾಯಿಸಿ ರೇಸ್ ನಡೆಸಲಾಗಿದೆ. ಇದರಿಂದ ಆತಂಕಗೊಂಡ ಸ್ಥಳೀಯರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದ ಬೇಕಲ್ ಠಾಣೆ ಪೊಲೀಸರು ಯುವಕರಿಗೆ ರೇಸ್ ನಿಲ್ಲಿಸುವಂತೆ ಸೂಚಿಸಿದ್ದಾರೆ ಆದರೆ ಕೆಲ ಯುವಕರು ಪೊಲೀಸರ ಜೊತೆ ವಾಗ್ವಾದ ನಡೆಸಿ ಪೊಲೀಸರ ಮೇಲೆಯೇ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆಯ ಬಳಿಕ ಕಾರ್ಯಾಚರಣೆ ನಡೆಸಿದ ಪೊಲೀಸರು ರೇಸ್ನಲ್ಲಿ ಬಳಸಲಾಗಿದ್ದ ಆರು ಕಾರುಗಳನ್ನು ವಶಕ್ಕೆ ಪಡೆದಿದ್ದಾರೆ.

ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬಂದಿಗಳ ಮೇಲೆ ಹಲ್ಲೆ, ಸಾರ್ವಜನಿಕ ಸ್ಥಳದಲ್ಲಿ ನಿರ್ಲಕ್ಷ್ಯ ಮತ್ತು ಅಪಾಯಕಾರಿ ರೀತಿಯಲ್ಲಿ ವಾಹನ ಚಲಾಯಿಸಿ ಸಾರ್ವಜನಿಕರ ಸುರಕ್ಷತೆಗೆ ಧಕ್ಕೆ ಉಂಟು ಮಾಡಿದ ಆರೋಪದಡಿ ಪ್ರತ್ಯೇಕ ಪ್ರಕರಣ ದಾಖಲಿಸಲಾಗಿದೆ. ಪ್ರಕರಣದ ತನಿಖೆ ಮುಂದುವರಿದಿದ್ದು, ಸಿಸಿಟಿವಿ ದೃಶ್ಯಗಳು, ಮೊಬೈಲ್ನಲ್ಲಿ ರೆಕಾರ್ಡ್ ಆದ ವಿಡಿಯೊಗಳು ಹಾಗೂ ಇತರೆ ದೃಶ್ಯ ಸಾಕ್ಷ್ಯಗಳನ್ನು ಪೊಲೀಸರು ಸಂಗ್ರಹಿಸುತ್ತಿದ್ದಾರೆ.


Discover more from Coastal Times Kannada
Subscribe to get the latest posts sent to your email.







Discussion about this post