ಮಂಗಳೂರು: ಇಂದಿನಿಂದ ಕೇರಳ–ಕರ್ನಾಟಕ ಗಡಿಯಲ್ಲಿ ಮತ್ತಷ್ಟು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು, ರಾಜ್ಯ ಸರ್ಕಾರದ ಸೂಚನೆ ಬೆನ್ನಲ್ಲೇ ತಲಪಾಡಿ ಗಡಿಯನ್ನು ಜಿಲ್ಲಾಡಳಿತ ಸಂಪೂರ್ಣ ಬಂದ್ ಮಾಡಿದೆ. ಗಡಿ ಪ್ರದೇಶಗಳಿಗೆ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯಿಂದ ಕಟ್ಟು ನಿಟ್ಟಿನ ಕ್ರಮ ಆರಂಭಿಸಿವೆ. ಗಡಿ ಭಾಗದ ತಲಪಾಡಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಮತ್ತು ಮಂಗಳೂರು ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಭೇಟಿ ನೀಡಿ, ತಪಾಸಣೆ ನಡೆಸಿದರು.
ಆರ್ಟಿಪಿಸಿಆರ್ ನೆಗೆಟಿವ್ ವರದಿ ಇಲ್ಲದವರನ್ನು ವಾಪಸ್ ಕಳುಹಿಸಲಾಗುತ್ತಿದೆ. ತಲಪಾಡಿ ಗಡಿ ಚೆಕ್ ಪೋಸ್ಟ್ನಲ್ಲಿ ವ್ಯವಸ್ಥೆ ಮಾಡಲಾಗಿದ್ದ ಆರ್ಟಿಪಿಸಿಆರ್ ಪರೀಕ್ಷಾ ಕೇಂದ್ರವನ್ನು ಬಂದ್ ಮಾಡಲಾಗಿದೆ. ಕೇರಳದಿಂದಲೇ ಆರ್ಟಿಪಿಸಿಆರ್ ನೆಗೆಟಿವ್ ವರದಿ ತರಲು ಸೂಚನೆ ನೀಡಲಾಗಿದೆ. ಸ್ವಯಂ ಪ್ರೇರಿತ ನೆಗೆಟಿವ್ ವರದಿ ತಂದರಷ್ಟೇ ಜಿಲ್ಲೆಗೆ ಪ್ರವೇಶಿಸಲು ಅವಕಾಶ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಗಡಿಭಾಗದ ಚೆಕ್ ಪೋಸ್ಟ್ ನಲ್ಲಿ ಪರೀಕ್ಷಾ ಕೇಂದ್ರ ಬಂದ್ ಮಾಡಿದ್ದರಿಂದ, ತಪಾಸಣೆಗಾಗಿ ಗಡಿಯಲ್ಲಿ ಸಾಲುಗಟ್ಟಿ ನಿಂತಿದ್ದ ಜನರು ಅಸಮಾಧಾನ ವ್ಯಕ್ತಪಡಿಸಿದರು. ಏಕಾಏಕಿ ಟೆಸ್ಟಿಂಗ್ ಸ್ಥಗಿತಗೊಳಿಸಿದ್ದು ಸರಿಯಲ್ಲ ಅಂತ ಕೇರಳಿದವರು ಆಕ್ರೋಶ ವ್ಯಕ್ತಪಡಿಸಿದರು. ಲಸಿಕೆ ಎರಡು ಡೋಸ್ ಪಡೆದವರಿಗೆ ಮಂಗಳೂರು ಪ್ರವೇಶಕ್ಕೆ ಅನುಮತಿ ಕೊಡಿ ಎಂದು ಒತ್ತಾಯಿಸಿದರು.
Discussion about this post