ಮಂಗಳೂರು, ಮಾ.5: ನಗರದ ಕಾರಾಗೃಹದಲ್ಲಿ ಕೈದಿಗಳಿಗೆ ದಿಢೀರ್ ಹೊಟ್ಟೆನೋವು, ವಾಂತಿ ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಧ್ಯಾಹ್ನದ ಊಟ ಸೇವಿಸಿದ ಬಳಿಕ ಘಟನೆ ನಡೆದಿದ್ದು, 45 ಮಂದಿಯನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕೈದಿಗಳಿಗೆ ಮಧ್ಯಾಹ್ನ ಅನ್ನ, ಸಾಂಬಾರ್ ಮತ್ತು ಬೆಳಗ್ಗೆ ಅವಲಕ್ಕಿ ನೀಡಲಾಗಿತ್ತು ಎನ್ನಲಾಗುತ್ತಿದೆ. ಮಧ್ಯಾಹ್ನ ಊಟದ ನಂತರ ವಾಂತಿ ಭೇದಿ ಕಾಣಿಸಿಕೊಂಡಿದೆ. ಆನಂತರ, ಅನಾರೋಗ್ಯ ಕಾಣಿಸಿದ ಕೈದಿಗಳನ್ನು ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಸಂಜೆ 3.30ರಿಂದ 4.30ರ ನಡುವೆ ನಾಲ್ಕು ಪೊಲೀಸ್ ಬಸ್ಸಿನಲ್ಲಿ ಕೈದಿಗಳನ್ನು ಆಸ್ಪತ್ರೆಗೆ ಒಯ್ಯಲಾಗಿದ್ದು, ಚಿಕಿತ್ಸೆಗೆ ದಾಖಲಿಸಲಾಗಿದೆ. ಈ ಪೈಕಿ ಒಬ್ಬನ ಸ್ಥಿತಿ ಗಂಭೀರ ಇರುವ ಮಾಹಿತಿ ಇದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್, “ಸಂಜೆ 4.30ರ ಸುಮಾರಿಗೆ ಕೈದಿಗಳಲ್ಲಿ ಹೊಟ್ಟೆ ನೋವು, ವಾಂತಿ ಭೇದಿ ಕಾಣಿಸಿಕೊಂಡಿದೆ. ಜೈಲಿನ ವಾಹನ, ಪೊಲೀಸ್ ವಾಹನಗಳಲ್ಲಿ ಕೈದಿಗಳನ್ನು ಆಸ್ಪತ್ರೆಗೆ ಸೇರಿಸಲಾಗಿದೆ. 45 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಗ್ಯಾಧಿಕಾರಿಗಳು ಜೈಲಿಗೆ ಭೇಟಿ ನೀಡಿ ಕೈದಿಗಳು ಸೇವಿಸಿರುವ ಆಹಾರದ ಸ್ಯಾಂಪಲ್ ಸಂಗ್ರಹಿಸಿದ್ದಾರೆ. ಒಬ್ಬರ ಸ್ಥಿತಿ ಗಂಭೀರವಾಗಿದ್ದು, ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 44 ಮಂದಿ ಕೈದಿಗಳ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಮಧ್ಯಾಹ್ನ ಕೈದಿಗಳಿಗೆ ಅವಲಕ್ಕಿ, ಅನ್ನ ಸಾಂಬಾರು ನೀಡಲಾಗಿತ್ತು. ಇದರಿಂದ ಸಮಸ್ಯೆಯಾಗಿರಬಹುದು ಎಂದು ಶಂಕಿಸಲಾಗಿದೆ” ಎಂದರು.
Discover more from Coastal Times Kannada
Subscribe to get the latest posts sent to your email.
Discussion about this post