ಮಂಡ್ಯ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಲಂಚದ ಬೇಡಿಕೆ ಇಡುತ್ತಿದ್ದಾರೆ ಎಂದು ಆರೋಪಿಸಿ ಕೃಷಿ ಇಲಾಖೆಯ 7 ಮಂದಿ ಸಹಾಯಕ ನಿರ್ದೇಶಕರು ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ ಎಂಬ ವಿಚಾರ ಚರ್ಚೆಗೆ ಕಾರಣವಾಗಿದೆ. ಈ ಬಗ್ಗೆ ಕ್ರಮ ವಹಿಸುವಂತೆ ರಾಜ್ಯಪಾಲರ ಅಧೀನ ಕಾರ್ಯದರ್ಶಿ ಸರ್ಕಾರದ ಮುಖ್ಯಕಾರ್ಯದರ್ಶಿಗೆ ಬರೆದಿದ್ದಾರೆ ಎನ್ನಲಾದ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
‘ಚಲುವರಾಯಸ್ವಾಮಿ ಅವರು ರೂ 8– ರೂ10 ಲಕ್ಷದವರೆಗೆ ಲಂಚ ನೀಡುವಂತೆ ಒತ್ತಡ ಹಾಕುತ್ತಿದ್ದಾರೆ. ಲಂಚಕ್ಕೆ ಕಡಿವಾಣ ಹಾಕದಿದ್ದರೆ ನಾವು ಹಾಗೂ ನಮ್ಮ ಕುಟುಂಬ ಸದಸ್ಯರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕರು ಪತ್ರದಲ್ಲಿ ದೂರುದ್ದಾರೆ. ಈ ಅರ್ಜಿಯನ್ನು ನಿಯಮಾನುಸಾರ ಪರಿಶೀಲಿಸಿ ಸೂಕ್ತ ಕ್ರಮ ವಹಿಸುವಂತೆ ಕೋರುತ್ತೇನೆ’ ಎಂದು ರಾಜ್ಯಪಾಲರ ಅಧೀನ ಕಾರ್ಯದರ್ಶಿ ಜಿ.ಪ್ರದೀಪ್ ಸರ್ಕಾರದ ಮುಖ್ಯಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.
ಈ ಕುರಿತು ಸೋಮವಾರ ನಗರದಲ್ಲಿ ಪ್ರತಿಕ್ರಿಯೆ ನೀಡಿದ ಕೃಷಿ ಸಚಿವ ಚಲುವರಾಯಸ್ವಾಮಿ ‘ಕೆಲವರು ಹುಡುಕಿ ಹುಡುಕಿ ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ, ಹಿಂದೆ ಬಸ್ ಚಾಲಕ ಆತ್ಮಹತ್ಯೆ ಯತ್ನ ಪ್ರಕರಣದಲ್ಲೂ ಇದೇ ರೀತಿ ಕುತಂತ್ರ ಮಾಡಿದ್ದರು. ಇದೊಂದು ನಕಲಿ ಪತ್ರವಾಗಿದೆ ಎಂದು ಕೃಷಿ ಇಲಾಖೆ ಅಧಿಕಾರಿಗಳೇ ಹೇಳಿದ್ದಾರೆ. ಆದರೂ ಪತ್ರದ ಸತ್ಯಾಸತ್ಯತೆ ಬಗ್ಗೆ ತನಿಖೆ ನಡೆಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೇನೆ’ ಎಂದು ತಿಳಿಸಿದರು.
‘ಕೃಷಿ ಇಲಾಖೆ ಜಂಟಿ ನಿರ್ದೇಶಕ ಈಗಾಗಲೇ ಸಹಾಯಕ ನಿರ್ದೇಶಕರ ಜೊತೆ ಆನ್ಲೈನ್ ಸಭೆ ನಡೆಸಿದ್ದಾರೆ. ಯಾರೂ ಕೂಡ ಈ ರೀತಿ ಪತ್ರ ಬರೆದಿಲ್ಲ ಎಂದು ತಿಳಿಸಿರುವ ಮಾಹಿತಿ ಸಿಕ್ಕಿದೆ. ಪ್ರಾಥಮಿಕ ತನಿಖೆಯಿಂದ ಅದೊಂದು ನಕಲಿ ಪತ್ರ ಎಂದು ಗೊತ್ತಾಗಿದೆ. ಈ ಬಗ್ಗೆ ತನಿಖೆ ನಡೆಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೂ ಸೂಚಿಸಿದ್ದೇನೆ’ ಎಂದರು.
Discussion about this post