ಮಂಗಳೂರು: ಕರ್ನಾಟಕದ ಕರಾವಳಿ ತೀರದ ಪ್ರವಾಸೋದ್ಯಮವನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ ಮಂಗಳೂರು-ಗೋವಾ ನಡುವೆ ಕ್ರೂಸ್ ಸೇವೆ ಹಾಗೂ ಕೇರಳ ಮಾದರಿಯ ಹೌಸ್ಬೋಟ್ಗಳನ್ನು ಪರಿಚಯಿಸುವ ಮಹತ್ವಾಕಾಂಕ್ಷಿ ಯೋಜನೆಗಳ ಸಾಧ್ಯಾಸಾಧ್ಯತೆಗಳ ಬಗ್ಗೆ ಸರ್ಕಾರ ಗಂಭೀರ ಅಧ್ಯಯನ ನಡೆಸುತ್ತಿದೆ ಎಂದು ಪ್ರವಾಸೋದ್ಯಮ ಮತ್ತು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ.
ನಗರದ ತಣ್ಣೀರುಬಾವಿಯ ‘ಬ್ಲೂ ಫ್ಲ್ಯಾಗ್’ ಕಡಲತೀರಕ್ಕೆ ಭಾನುವಾರ ಭೇಟಿ ನೀಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.
ಕರಾವಳಿ ಜಲ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ಯೋಜನೆಗಳ ಕುರಿತು ವಿವರ ನೀಡಿದ ಸಚಿವರು ಕರಾವಳಿಯುದ್ದಕ್ಕೂ ಇರುವ ಪ್ರಮುಖ ಪ್ರವಾಸಿ ತಾಣಗಳಲ್ಲಿ ನಿಲುಗಡೆ ನೀಡುವ ಮೂಲಕ ಮಂಗಳೂರಿನಿಂದ ಗೋವಾಕ್ಕೆ ಸಂಪರ್ಕ ಕಲ್ಪಿಸುವ ಕ್ರೂಸ್ ಸೇವೆ ಆರಂಭಿಸುವ ಸಾಧ್ಯತೆಗಳನ್ನು ಪರಿಶೀಲಿಸಲಾಗುತ್ತಿದೆ. ಸ್ಥಳೀಯ ಶಿಪ್ಯಾರ್ಡ್ಗಳಲ್ಲಿ ನಿರ್ಮಾಣವಾಗುವ ಹಡಗುಗಳನ್ನೇ ಈ ಸೇವೆಗೆ ಬಳಸಿಕೊಳ್ಳುವ ಚಿಂತನೆಯಿದೆ ಎಂದರು.
ನವ ಮಂಗಳೂರು ಬಂದರಿಗೆ (NMPA) ಆಗಮಿಸುವ ವಿದೇಶಿ ಕ್ರೂಸ್ ಪ್ರವಾಸಿಗರು ನಗರದಲ್ಲೇ ತಂಗಿ ಸ್ಥಳೀಯ ತಾಣಗಳಿಗೆ ಭೇಟಿ ನೀಡುವಂತೆ ಪ್ರೇರೇಪಿಸಲು ಮೂಲಸೌಕರ್ಯ ಸೃಷ್ಟಿಸಲಾಗುತ್ತಿದೆ. ಈ ಕುರಿತು ಕೇಂದ್ರ ಬಂದರು, ಹಡಗು ಮತ್ತು ಜಲಮಾರ್ಗಗಳ ಸಚಿವಾಲಯದೊಂದಿಗೆ ಮಾತುಕತೆ ನಡೆಸಲಾಗುತ್ತಿದೆ. ಹಿನ್ನೀರಿನಲ್ಲಿ ಕೇರಳ ಮಾದರಿಯ ಹೌಸ್ಬೋಟ್ಗಳನ್ನು ಪರಿಚಯಿಸುವ ಪ್ರಸ್ತಾವನೆ ಆರಂಭಿಕ ಅಧ್ಯಯನದ ಹಂತದಲ್ಲಿದೆ ಎಂದು ಹೇಳಿದರು.
ಸೆ.18ರ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾವನೆ: ಮಂಗಳೂರಿನಲ್ಲಿ ಸೆಪ್ಟೆಂಬರ್ 18ರಂದು ಜರುಗಲಿರುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕರಾವಳಿ ಮತ್ತು ಮಲೆನಾಡು ಭಾಗದ ಪ್ರವಾಸೋದ್ಯಮ ಯೋಜನೆಗಳಿಗೆ ಒತ್ತು ನೀಡಲಾಗುವುದು ಎಂದ ಜಾರ್ಜ್, ಈ ಸಂಬಂಧ ಈಗಾಗಲೇ ಮುಖ್ಯಮಂತ್ರಿಗಳೊಂದಿಗೆ ವಿಸ್ತೃತ ಚರ್ಚೆ ನಡೆಸಲಾಗಿದ್ದು, ಸಂಪುಟ ಸಭೆಯಲ್ಲಿ ಮಹತ್ವದ ಯೋಜನೆಗಳಿಗೆ ಅನುಮೋದನೆ ದೊರೆಯುವ ವಿಶ್ವಾಸವಿದೆ. ಅಲ್ಲದೆ ರಾಜ್ಯದ ಮತ್ತಷ್ಟು ಕಡಲತೀರಗಳಿಗೆ ‘ಬ್ಲೂ ಫ್ಲ್ಯಾಗ್’ ಪ್ರಮಾಣೀಕರಣ ಪಡೆಯಲು ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು.
ಕ್ಯಾಸಿನೊ ತೆರೆಯುವ ಪ್ರಸ್ತಾವನೆ ಇಲ್ಲ: ಗೋವಾ ಮಾದರಿಯಲ್ಲಿ ರಾಜ್ಯದ ಕರಾವಳಿಯಲ್ಲಿ ಕ್ಯಾಸಿನೊಗಳನ್ನು ಆರಂಭಿಸುವ ಯಾವುದೇ ಚಿಂತನೆ ಅಥವಾ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಸಚಿವರು ಖಚಿತಪಡಿಸಿದರು. ಸ್ಥಳೀಯ ಯುವಜನರಿಗೆ ಉದ್ಯೋಗ ಸೃಷ್ಟಿ, ಸ್ಥಳೀಯ ವ್ಯಾಪಾರ ಮತ್ತು ಆರ್ಥಿಕತೆಗೆ ಚೈತನ್ಯ ನೀಡುವುದೇ ಪ್ರವಾಸೋದ್ಯಮ ಉತ್ತೇಜನದ ಮೂಲ ಗುರಿಯಾಗಿದೆ ಎಂದು ಸ್ಪಷ್ಟಪಡಿಸಿದರು.
ಸಿಆರ್ಝಡ್ (CRZ) ನಿಯಮಗಳಿಂದಾಗಿ ಕರಾವಳಿಯಲ್ಲಿ ರಸ್ತೆ ಅಭಿವೃದ್ಧಿಗೆ ಎದುರಾಗಿರುವ ಅಡೆತಡೆಗಳನ್ನು ನಿವಾರಿಸಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ತಣ್ಣೀರುಬಾವಿ ಬೀಚ್ನಲ್ಲಿ ಮುಚ್ಚಲ್ಪಟ್ಟಿರುವ ಆಹಾರ ಮಳಿಗೆಗಳ ಆದಾಯ ಹಂಚಿಕೆ ವಿವಾದವನ್ನು ಸ್ಥಳೀಯ ಶಾಸಕರು ಹಾಗೂ ಜಿಲ್ಲಾಧಿಕಾರಿಗಳು ಸಮಾಲೋಚನೆ ನಡೆಸಿ, ಕೊಡು-ಕೊಳ್ಳುವ ಮನೋಭಾವದ ಮೂಲಕ ಶೀಘ್ರವೇ ಬಗೆಹರಿಸಿ ಮಳಿಗೆಗಳನ್ನು ಪುನರಾರಂಭಿಸಬೇಕು ಎಂದು ಸೂಚಿಸಿದರು.
ಕರಾವಳಿ ಜಿಲ್ಲೆಗಳಲ್ಲಿ ‘ವೈದ್ಯಕೀಯ ಪ್ರವಾಸೋದ್ಯಮ’ ಬೆಳವಣಿಗೆಗೂ ಅಗತ್ಯ ಮೂಲಸೌಕರ್ಯ ಕಲ್ಪಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ. ಗಫೂರ್, ಮುಖಂಡರಾದ ಜೆ.ಆರ್. ಲೋಬೊ, ಇನಾಯತ್ ಅಲಿ, ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿ ಡಾ. ವಿ. ರಾಮ್ ಪ್ರಸಾದ್ ಮನೋಹರ್, ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
Discover more from Coastal Times Kannada
Subscribe to get the latest posts sent to your email.







Discussion about this post