ಸುರತ್ಕಲ್: ಪ್ರವಾಸಕ್ಕೆಂದು ಬಂದಿದ್ದ ನಾಲ್ವರು ಸ್ನೇಹಿತರು ಈಜಾಡಲು ನೀರಿಗೆ ಇಳಿದಿದ್ದು, ಈ ಪೈಕಿ ಮೂವರು ನೀರಿನಲ್ಲಿ ಕೊಚ್ಚಿ ಹೋಗಿದ್ದು, ಒಬ್ಬರನ್ನು ರಕ್ಷಿಸಿದ ಘಟನೆ ಜ.8ರ ಬುಧವಾರ ಇಲ್ಲಿನ ಹೊಸಬೆಟ್ಟು ಬೀಚ್ ನ ನಿರ್ಮಾಣ ಹಂತದ ಜೆಟ್ಟಿ ಬಳಿಯಿರುವ ಬೀಚ್ ನಲ್ಲಿ ಸಂಭವಿಸಿದೆ.
ಬೆಂಗಳೂರು ಜೆಪಿನಗರ ನಿವಾಸಿ ಸತ್ಯವೇಲು (30), ಶಿವಮೊಗ್ಗದ ಶಿವಕುಮಾರ್, ಚಿತ್ರದುರ್ಗ ಜಿಲ್ಲೆಯ ಗುಳಿ ಹೊಸಹಳ್ಳಿ, ಉಪ್ಪರಿಗೇನಹಳ್ಳಿಯ ಶಿವಲಿಂಗಪ್ಪ ಅವರ ಪುತ್ರ ಮಂಜುನಾಥ್. ಎಸ್ (31) ಮೃತಪಟ್ಟವರಾಗಿದ್ದು, ಬೀದರ್ ಜಿಲ್ಲೆಯ ಹಂಗಾರಗಾದ ವಿಶ್ವಂಬರ್ ಅವರ ಪುತ್ರ ಪರಮೇಶ್ವರ್ (30) ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಈ ನಾಲ್ವರು ಬೆಂಗಳೂರಿನ ಎಎಂಸಿ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಾಗಿದ್ದು, ಎಲ್ಲರೂ ಸ್ನೇಹಿತರಾಗಿದ್ದರು. ಇವರು ಮಂಗಳವಾರ ರಾತ್ರಿ ಕಾರಿನಲ್ಲಿ ಬೆಂಗಳೂರಿನಿಂದ ಹೊರಟು ಇಂದು ಬೆಳಗ್ಗೆ ಮಂಗಳೂರಿಗೆ ತಲುಪಿದ್ದರು. ಮಂಗಳೂರಿನ ಹೊಟೇಲ್ವೊಂದರಲ್ಲಿ ಬೆಳಗ್ಗಿನ ಉಪಹಾರ ಸೇವಿಸಿ ಬಳಿಕ ಮಧ್ಯಾಹ್ನದ ವೇಳೆಗೆ ಕುಳಾಯಿಜೆಟ್ಟಿ ಬಳಿಗೆ ಬಂದಿದ್ದಾರೆ. ಅಲ್ಲಿ ಎಲ್ಲರೂ ಸಮುದ್ರಕ್ಕೆ ಇಳಿದು ಆಡುತ್ತಿದ್ದ ಸಂದರ್ಭ ನಾಲ್ವರು ನೀರು ಪಾಲಾಗಿದ್ದಾರೆ ಎನ್ನಲಾಗಿದೆ. ಘಟನೆಯನ್ನು ಗಮನಿಸುತ್ತಿದ್ದ ಸ್ಥಳೀಯ ಮೀನುಗಾರರು ನಾಲ್ವರ ರಕ್ಷಣೆಗೆ ಮುಂದಾದರಾದರೂ ಅಷ್ಟರಲ್ಲೇ ಮೂವರು ನೀರು ಪಾಲಾಗಿದ್ದರು. ಓರ್ವನನ್ನು ರಕ್ಷಿಸಿ ತಕ್ಷಣ ಆತನನ್ನು ನಗರದ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.
ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುವುದು. ಮೃತದೇಹಗಳನ್ನು ನಗರದ ಎ.ಜೆ.ಆಸ್ಪತ್ರೆಗೆ ರವಾನಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
Discover more from Coastal Times Kannada
Subscribe to get the latest posts sent to your email.
Discussion about this post