ಮಂಗಳೂರು: ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಮಂಗಳವಾರ ಮುಂಜಾನೆ ಮತ್ತೊಂದು ದರೋಡೆ ಪ್ರಕರಣ ನಡೆದಿದ್ದು, ಆರೋಪಿಗಳು ಪರಾರಿಯಾದ ಮನೆ ಮಾಲೀಕರು ಕಾರು ಮೂಲ್ಕಿಯಲ್ಲಿ ಪತ್ತೆಯಾಗಿದೆ. ಕಳೆದ ಶನಿವಾರ ನಗರದ ಕೋಡಿಕಲ್ ಬಳಿ ಕಳ್ಳತನ ನಡೆದಿತ್ತು. ಚಡ್ಡಿಗ್ಯಾಂಗ್ ಆ ಕೃತ್ಯ ನಡೆಸಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದರು.ಅದೇ ತಂಡ ಕೋಟೆಕಣಿಯಲ್ಲಿಯೂ ಕೃತ್ಯ ಎಸಗಿದೆ ಎಂದು ಅಂದಾಜಿಸಲಾಗಿದೆ.
ಮಂಗಳವಾರ ಮುಂಜಾನೆ 3.30ರ ಅವಧಿಯಲ್ಲಿ 4 ಮಂದಿ ದರೋಡೆಕೋರರ ತಂಡ ಉರ್ವ ಕೊಟ್ಟಾರದ ಬಳಿಯಿರುವ ಮನೆ ಪ್ರವೇಶಿಸಿದೆ. ಮನೆಯಲ್ಲಿ ಹಿರಿಯ ನಾಗರಿಕರಿದ್ದು, ಅವರ ಮಕ್ಕಳು ವಿದೇಶದಲ್ಲಿದ್ದಾರೆ. ಮನೆಯವರಿಗೆ ಮಾರಕಾಯುಧ ತೋರಿಸಿ ಬೆದರಿಸಿ ದರೋಡೆ ಕೃತ್ಯ ನಡೆಸಿದ್ದಾರೆ. ಬಳಿಕ ಮನೆಯ ಕಾರಿನ ಕೀ ಪಡೆದು ಆ ಕಾರಿನಲ್ಲಿ ಉಡುಪಿಯತ್ತ ತೆರಳಿದ್ದಾರೆ. ಹೆಜಮಾಡಿ ಟೋಲ್ ಗೇಟ್ ಮುನ್ನ ಕಾರು ನಿಲ್ಲಿಸಿ ಅವರ ಕಾರಿನಲ್ಲಿ ಪರಾರಿಯಾಗಿರುವ ಶಂಕೆಯಿದೆ. ದರೋಡೆಗೈದ ಸೊತ್ತುಗಳ ಮೌಲ್ಯ ಇನ್ನೂ ತಿಳಿದು ಬಂದಿಲ್ಲ. ಕಾರಿನೊಳಗೆ ಮೊಬೈಲ್ ಒಂದು ಪತ್ತೆಯಾಗಿದ್ದು, ಇದು ಯಾರ ಮೊಬೈಲ್ ಎಂದು ತಿಳಿದು ಬಂದಿದೆ. ಪೊಲೀಸರ ಮಾಹಿತಿ ಪ್ರಕಾರ ಇದು ದರೋಡೆಕೋರರ ಮೊಬೈಲ್ ಅವಸರದಲ್ಲಿ ಕಾರಿನಲ್ಲೇ ಬಾಕಿಯಾಗಿರುವ ಸಾಧ್ಯತೆ ಇದೆ. ಕಾರಿನ ಬಾಗಿಲು ಇನ್ನೂ ತೆರೆದು ಪರಿಶೀಲನೆ ನಡೆಸಿಲ್ಲ.
ಕೊಟ್ಟಾರದ ಮನೆಗೆ ಉರ್ವ ಪೊಲೀಸರು, ಹಿರಿಯ ಅಧಿಕಾರಿಗಳು ತೆರಳಿ ಪರಿಶೀಲನೆ ನಡೆಸಿದ್ದಾರೆ. ಮುಲ್ಕಿ ಪೊಲೀಸರು ಕಾರನ್ನು ಪತ್ತೆಹಚ್ಚಿ, ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆ ಬೆನ್ನಲ್ಲೇ ಪೊಲೀಸರು ದರೋಡೆಗೈದ ಮನೆಯ ಸುತ್ತಮುತ್ತ, ರಸ್ತೆ, ಹೆದ್ದಾರಿಯ ಸಿಸಿ ಕ್ಯಾಮೆರಾಗಳನ್ನು ಶೋಧ ನಡೆಸುತ್ತಿದ್ದಾರೆ.
Discover more from Coastal Times Kannada
Subscribe to get the latest posts sent to your email.
Discussion about this post