ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಮಹಿಳಾ ಆಯೋಗ, ಬೆಂಗಳೂರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಸ್ತ್ರೀಶಕ್ತಿ ಒಕ್ಕೂಟ ಮಂಗಳೂರು ಇವರ ಸಹಯೋಗದಲ್ಲಿ ಜಿಲ್ಲಾ ಪಂಚಾಯತ್ ನ ನೇತ್ರಾವತಿ ಸಭಾಂಗಣದಲ್ಲಿ ನಡೆದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ-2022 ಕಾರ್ಯಕ್ರಮದಲ್ಲಿ ಕ್ರೀಡಾ ಕ್ಷೇತ್ರದಲ್ಲಿ ಅತ್ಯುನ್ನತ ಸಾಧನೆ ಮಾಡಿ ಪ್ರಥಮ ಸ್ಥಾನ ಪಡೆದ ಸ್ಕೇಟಿಂಗ್ ಪಟು ಕುಮಾರಿ ಅನಘಾ ರಾಜೇಶ್ ಗೆ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಅಸಾಧಾರಣ ಪ್ರತಿಭೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.ದ.ಕ ಸಂಸದ ನಳಿನ್ ಕುಮಾರ್ ಕಟೀಲ್,ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ,ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಕತ್ತಲ್ ಸಾರ್,ಜಿಲ್ಲಾ ಪಂಚಾಯತ್ ಸಿಇಓ ಡಾ.ಕುಮಾರ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.
ತನ್ನ ನಾಲ್ಕನೇ ವಯಸ್ಸಿನಲ್ಲಿ ಸ್ಕೇಟಿಂಗ್ ತರಬೇತಿ ಆರಂಭಿಸಿ ಜಿಲ್ಲಾ,ರಾಜ್ಯ, ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದ ಸ್ಕೇಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಭಾಗವಹಿಸಿ ಒಟ್ಟು 26 ಚಿನ್ನದ ಪದಕ,11 ಬೆಳ್ಳಿ ಪದಕ ಹಾಗೂ 8 ಕಂಚಿನ ಪದಕ ಪಡೆದು ತನ್ನ 12 ನೇ ವಯಸ್ಸಿನಲ್ಲೇ ಅತ್ಯುನ್ನತ ಸಾಧನೆ ಮಾಡಿದ್ದಾರೆ.ಮಂಗಳೂರಿನ ಕದ್ರಿ ಹಿಲ್ಸ್ ನಿವಾಸಿ ಡಾ.ರಾಜೇಶ್ ಹುಕ್ಕೇರಿ ಹಾಗೂ ಡಾ.ಅನಿತಾ ರಾಜೇಶ್ ದಂಪತಿಯ ಪುತ್ರಿಯಾಗಿರುವ ಅನಘಾ ರಾಜೇಶ್ ಬಿಜೈ ಲೂರ್ಡ್ಸ್ ಸೆಂಟ್ರಲ್ ಸ್ಕೂಲ್ನ 6 ನೇ ತರಗತಿಯ ವಿದ್ಯಾರ್ಥಿನಿಯಾಗಿದ್ದು,ಅಂತರಾಷ್ಟ್ರೀಯ ಸ್ಕೇಟಿಂಗ್ ಕೋಚ್ ಪ್ರತೀಕ್ ರಾಜ ಅವರಿಂದ ಬೆಂಗಳೂರಿನಲ್ಲಿ ತರಬೇತಿ ಪಡೆಯುತ್ತಿದ್ದಾರೆ.
Discover more from Coastal Times Kannada
Subscribe to get the latest posts sent to your email.
Discussion about this post