ಉಡುಪಿ, ಸೆ.10 : ಕ್ರಿಮಿನಲ್ ಪ್ರಕರಣವೊಂದರಲ್ಲಿ ಆರೋಪಿಗೆ ಜಾಮೀನು ಕೊಡಿಸುವ ಉದ್ದೇಶದಿಂದ ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ನಕಲಿ ಆಧಾರ್ ಕಾರ್ಡ್ ಸಲ್ಲಿಸಿದ ಆರೋಪದ ಮೇಲೆ ಉಡುಪಿ ನಗರ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರನ್ನು ಬಂಟ್ವಾಳದ ಉಮರ್ ಫಾರೂಕ್ ಹಾಗೂ ಮಂಗಳೂರಿನ ನಿಶಾಂತ್ ಕುಮಾರ್ ಎಂದು ಗುರುತಿಸಲಾಗಿದೆ.
ಉಡುಪಿ ಜಿಲ್ಲಾ ನ್ಯಾಯಾಲಯದ ಆಡಳಿತಾಧಿಕಾರಿ ಅಬ್ಬಾಸ್ ನೀಡಿದ ದೂರಿನ ಆಧಾರದಲ್ಲಿ ಪ್ರಕರಣ ದಾಖಲಾಗಿದೆ. ಸನ್ ಪೊಲೀಸ್ ಠಾಣೆಯ ಅಪರಾಧ ಸಂಖ್ಯೆ 03/2025ಕ್ಕೆ ಸಂಬಂಧಿಸಿದ ವಿಶೇಷ ಪ್ರಕರಣ ಸಂಖ್ಯೆ 31/2025 ಹಾಗೂ ಕ್ರಿಮಿನಲ್ ಮಿಸೆಲೆನಿಯಸ್ ಸಂಖ್ಯೆ 41/2026ರ ವಿಚಾರಣೆ ನಡೆಯುತ್ತಿತ್ತು. ಆರೋಪಿ ನೋಮಾನ್ಗೆ ಜಾಮೀನು ಪಡೆಯುವ ಪ್ರಕ್ರಿಯೆ ವೇಳೆ ಫಾರೂಕ್ ಎಂಬಾತನು ಪ್ರಶಾಂತ್ ಅವರಿಗೆ ಸೇರಿದ ಆಧಾರ್ ಕಾರ್ಡ್ ಸಂಖ್ಯೆಯನ್ನು ಬಳಸಿಕೊಂಡು, ಅದರಲ್ಲಿ ಕೆ.ಟಿ. ಮೊಹಮ್ಮದ್ ಅವರ ಹೆಸರು ಹಾಗೂ ವಿಳಾಸವನ್ನು ನಕಲಿಯಾಗಿ ನಮೂದಿಸಿದ್ದಾನೆ ಎಂದು ಆರೋಪಿಸಲಾಗಿದೆ.
ಇನ್ನೊಬ್ಬ ವ್ಯಕ್ತಿಯಂತೆ ನಟಿಸಿ ನ್ಯಾಯಾಲಯವನ್ನು ದಾರಿ ತಪ್ಪಿಸುವ ಉದ್ದೇಶದಿಂದ ಈ ನಕಲಿ ಆಧಾರ್ ಕಾರ್ಡ್ ಸಿದ್ಧಪಡಿಸಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. 2026 ರ ಆಗಸ್ಟ್ 30ರಂದು ಈ ನಕಲಿ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದ್ದು, ನ್ಯಾಯಾಲಯದ ಜೊತೆಗೆ ನೈಜ ಗುರುತು ಹಾಗೂ ದಾಖಲೆಗಳ ಹಕ್ಕುದಾರರಾದ ಕೆ.ಟಿ. ಮೊಹಮ್ಮದ್ ಮತ್ತು ಪ್ರಶಾಂತ್ ಅವರಿಗೂ ವಂಚನೆ ಎಸಗಲಾಗಿದೆ ಎಂದು ಆರೋಪಿಸಲಾಗಿದೆ.
ದೂರಿನ ಆಧಾರದ ಮೇಲೆ ಉಡುಪಿ ನಗರ ಪೊಲೀಸರು ಭಾರತೀಯ ನ್ಯಾಯ ಸಂಹಿತೆ (ಬಿಎನ್ಎಸ್) 2023ರ ಸೆಕ್ಷನ್ಗಳಾದ 319(2), 336(3), 318(4), 229(1) ಮತ್ತು 340(2) ಹಾಗೂ ಆಧಾರ್ ಕಾಯ್ದೆಯ ಸಂಬಂಧಿತ ಕಲಂಗಳ ಅಡಿಯಲ್ಲಿ ಅಪರಾಧ ಸಂಖ್ಯೆ 110/2026 ದಾಖಲಿಸಿಕೊಂಡಿದ್ದಾರೆ. ಆರೋಪಿಗಳನ್ನು ಪೊಲೀಸರು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಹಿರಿಯ ಪೊಲೀಸ್ ಅಧಿಕಾರಿಗಳ ಸೂಚನೆಯ ಮೇರೆಗೆ ಉಡುಪಿ ನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಮಹೇಶ್ ಪ್ರಸಾದ್ ಪಿ. ಅವರ ಮಾರ್ಗದರ್ಶನದಲ್ಲಿ ಹಾಗೂ ತನಿಖೆ-2 ಪಿಎಸ್ಐ ರತ್ನಾಕರ್ ಕೆ. ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿತ್ತು.
ತಂಡದಲ್ಲಿ ಎಎಸ್ಐ ಲೋಕೇಶ್, ಹೆಡ್ ಕಾನ್ಸ್ಟೆಬಲ್ಗಳಾದ ಸಂತೋಷ್ ಹಾಗೂ ಜಗನ್ನಾಥ ನಾಯಕ್, ಪೊಲೀಸ್ ಕಾನ್ಸ್ಟೆಬಲ್ಗಳಾದ ಆನಂದ್ ಮತ್ತು ಆನಂದಯ್ಯ, ಮಣಿಪಾಲ ಪೊಲೀಸ್ ಠಾಣೆಯ ಮಲ್ಲಯ್ಯ ಹಿರೇಮಠ್ ಹಾಗೂ ಹೇಮಂತ್ ಸೇರಿದಂತೆ ಉಡುಪಿ ನಗರ ಪೊಲೀಸ್ ಠಾಣೆಯ ಇತರ ಸಿಬ್ಬಂದಿ ಇದ್ದರು. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.
Discover more from Coastal Times Kannada
Subscribe to get the latest posts sent to your email.








Discussion about this post