ಮಂಗಳೂರು: ‘ವಾಟ್ಸ್ ಆ್ಯಪ್, ಫೇಸ್ ಬುಕ್, ಇನ್ಸ್ಟಾಗ್ರಾಂ ಟ್ವಿಟರ್ ಮತ್ತಿತರ ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಸೌಹಾರ್ದಕ್ಕೆ ಧಕ್ಕೆ ತರುವಂತಹ ಸಂದೇಶಗಳನ್ನು ಹಂಚಿಕೊಂಡವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಎಚ್ಚರಿಸಿದ್ದಾರೆ.
ಈಗಾಗಲೇ ಕಳೆದ ಒಂದು ತಿಂಗಳಲ್ಲಿ ಈ ರೀತಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ 21 ಪ್ರಕರಣಗಳನ್ನು ದಾಖಲಿಸಲಾಗಿದೆ. ವಾಟ್ಸಪ್, ಫೇಸ್ಬುಕ್, ಇನ್ ಸ್ಟಾ ಗ್ರಾಮ್, ಟ್ವಿಟರ್ ಇನ್ನಿತರ ಜಾಲತಾಣದಲ್ಲಿ ಪೋಸ್ಟ್ ಹಾಕುವ ಬಗ್ಗೆ ಪೊಲೀಸ್ ಇಲಾಖೆ ನಿಗಾ ಇಡುತ್ತದೆ. ಯಾವುದೇ ರೀತಿಯ ಆಕ್ಷೇಪಾರ್ಹ ಪೋಸ್ಟ್ ಹಾಕಿದಲ್ಲಿ, ಅವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.
‘ಧರ್ಮಕ್ಕೆ ಸಂಬಂಧಿಸಿದಂತೆ ಪರ ಮತ್ತು ವಿರೋಧ ಸಂದೇಶಗಳನ್ನು ಪ್ರಕಟಿಸುವುದು, ಹಂಚಿಕೊಳ್ಳುವುದು ಹಾಗೂ ಅವುಗಳ ಕುರಿತ ಅಭಿಪ್ರಾಯ ವ್ಯಕ್ತಪಡಿಸುವ ವ್ಯಕ್ತಿಗಳ ಮೇಲೆ ಕಮಿಷನರೇಟ್ ವ್ಯಾಪ್ತಿಯ ಎಲ್ಲಾ ಪೊಲೀಸ್ ಠಾಣೆಗಳ ಹಾಗೂ ಸಾಮಾಜಿಕ ಮಾಧ್ಯಮ ಕೋಶದ ಮೂಲಕ ನಿಗಾ ವಹಿಸುತ್ತಿದ್ದೇವೆ. ಕೋಮುಸೌಹಾರ್ದಕ್ಕೆ ಧಕ್ಕೆ ತರುವಂತಹ ಸಂದೇಶ ಹಂಚಿಕೊಂಡು ಕಾನೂನು ಉಲ್ಲಂಘಿಸಿದರೆ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ. ಇಂತಹ ಅಪರಾಧ ಪುನರಾವರ್ತನೆ ಮಾಡಿದಲ್ಲಿ ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಿದ್ದೇವೆ’ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Discussion about this post