ಬೆಂಗಳೂರು: ಕರ್ನಾಟಕ ಸರ್ಕಾರವು ರಾಜ್ಯಾದ್ಯಂತ ತಂಬಾಕು ಮತ್ತು ನಿಕೋಟಿನ್ ಹೊಂದಿರುವ ಗುಟ್ಕಾ, ಪಾನ್ ಮಸಾಲ ಹಾಗೂ ಇತರ ನಿಷೇಧಿತ ಉತ್ಪನ್ನಗಳ ತಯಾರಿಕೆ, ಸಂಗ್ರಹಣೆ, ಸಾರಿಗೆ, ವಿತರಣೆ ಮತ್ತು ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿದೆ.
ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ, 2006ರ ನಿಯಮಗಳ ಅಡಿಯಲ್ಲಿ ಈ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಆಹಾರ ಸುರಕ್ಷತಾ ಅಧಿಕಾರಿಗಳ ನೇತೃತ್ವದಲ್ಲಿ ರಾಜ್ಯದಾದ್ಯಂತ ವಿಶೇಷ ತನಿಖೆ ಮತ್ತು ದಾಳಿ ಕಾರ್ಯಾಚರಣೆಗಳನ್ನು ಆರಂಭಿಸಲಾಗಿದೆ. ಮತ್ತು ನಿಷೇಧಿತ ಉತ್ಪನ್ನಗಳ ಮಾರಾಟದ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ.
ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006ರ ಕಲಂ 30(2)(a) ಸೇರಿದಂತೆ Food Safety and Standards Regulations, 2011ರ ನಿಯಮ 2.3.4 ಅಡಿಯಲ್ಲಿ ಈ ಕಠಿಣ ಕ್ರಮ ಜರುಗಿಸಲಾಗಿದೆ. ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯು 2026ರ ಆಗಸ್ಟ್ 10ರಂದು ಈ ಸಂಬಂಧ ಅಧಿಕೃತ ಅಧಿಸೂಚನೆ ಹೊರಡಿಸಿದ್ದು, ಅಧಿಸೂಚನೆ ಹೊರಡಿಸಿದ ದಿನಾಂಕದಿಂದಲೇ ಈ ಆದೇಶ ಜಾರಿಗೆ ಬಂದಿದೆ. ಪ್ಯಾಕ್ ಮಾಡಿದ ಅಥವಾ ಪ್ರತ್ಯೇಕವಾಗಿ ಮಾರಾಟ ಮಾಡುವ ಎಲ್ಲಾ ಮಾದರಿಯ ನಿಷೇಧಿತ ತಂಬಾಕು ಉತ್ಪನ್ನಗಳ ಮೇಲೆಯೂ ಇಲಾಖೆ ತೀವ್ರ ನಿಗಾ ಇರಿಸಿದೆ.

ವಿಶೇಷ ಕಾರ್ಯಾಚರಣೆ ಮತ್ತು ಕಠಿಣ ಕ್ರಮ: ರಾಜ್ಯಾದ್ಯಂತ ನಿಯಮ ಉಲ್ಲಂಘನೆಗಳನ್ನು ತಡೆಗಟ್ಟಲು ಆಹಾರ ಸುರಕ್ಷತಾ ಅಧಿಕಾರಿಗಳ ನೇತೃತ್ವದಲ್ಲಿ ವಿಶೇಷ ತಪಾಸಣೆ ಮತ್ತು ಜಾರಿ ಕಾರ್ಯಾಚರಣೆಗಳನ್ನು ಕೈಗೊಳ್ಳಲಾಗುತ್ತಿದೆ. ಮಾರುಕಟ್ಟೆಯಲ್ಲಿ ನಿಷೇಧಿತ ಉತ್ಪನ್ನಗಳ ತಯಾರಿಕೆ, ಮಾರಾಟ ಅಥವಾ ವಿತರಣೆ ಕಂಡುಬಂದರೆ ಕಾನೂನು ರೀತ್ಯಾ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ಎಚ್ಚರಿಸಿದೆ.
ಇದರೊಂದಿಗೆ, ಸಾರ್ವಜನಿಕರು ತಮ್ಮ ಆಸುಪಾಸಿನಲ್ಲಿ ಇಂತಹ ನಿಷೇಧಿತ ಉತ್ಪನ್ನಗಳ ಅಕ್ರಮ ಮಾರಾಟ ಅಥವಾ ಸಂಗ್ರಹಣೆ ಕಂಡುಬಂದಲ್ಲಿ ತಕ್ಷಣವೇ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ. ಆರೋಗ್ಯಕರ ಹಾಗೂ ಸುಸ್ಥಿರ ಸಮಾಜದ ನಿರ್ಮಾಣಕ್ಕಾಗಿ ಸಾರ್ವಜನಿಕರು ಸರ್ಕಾರದ ಈ ಮಹತ್ತರ ಆಂದೋಲನಕ್ಕೆ ಪೂರ್ಣ ಸಹಕಾರ ನೀಡಬೇಕಾಗಿ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಪ್ರಕಟಣೆಯಲ್ಲಿ ಕೋರಿದೆ.
Discover more from Coastal Times Kannada
Subscribe to get the latest posts sent to your email.







Discussion about this post