ಮೈಸೂರು: ಕೆ.ಎಸ್.ಮಂಜುನಾಥ್ ಅಲಿಯಾಸ್ ಸ್ಯಾಂಟ್ರೊ ರವಿಯನ್ನು ಮೈಸೂರು ಪೊಲೀಸರು ಗುಜರಾತ್ನಲ್ಲಿ ಶುಕ್ರವಾರ ಬಂಧಿಸಿದ್ದಾರೆ. ಯುವತಿಯೊಬ್ಬರಿಗೆ ಕೆಲಸ ನೀಡುವ ಭರವಸೆ ನೀಡಿ ಅವರನ್ನು ಬಲವಂತವಾಗಿ ವಿವಾಹವಾಗಿ ದೌರ್ಜನ್ಯ ಎಸಗಿರುವ ಆರೋಪದ ಮೇಲೆ ಕೆ.ಎಸ್. ಮಂಜುನಾಥ್ ಅಲಿಯಾಸ್ ಸ್ಯಾಂಟ್ರೋ ರವಿ ವಿರುದ್ಧ ಪ್ರಕರಣ ದಾಖಲಾಗಿತ್ತು. ಸ್ವತಃ ಸಂತ್ರಸ್ತೆಯೇ ಆತನ ವಿರುದ್ಧ ಮೈಸೂರಿನಲ್ಲಿ ದೂರು ದಾಖಲಿಸಿದ್ದರು.
ಈ ದೂರಿನ ನಂತರ ರಾಜ್ಯ ರಾಜಕಾರಣದಲ್ಲಿ ಕೆ.ಎಸ್.ಮಂಜುನಾಥ ಅಲಿಯಾಸ್ ಸ್ಯಾಂಟ್ರೋ ರವಿ ಬಾರಿ ಸದ್ದು ಮಾಡಿತ್ತು. ದೂರು ದಾಖಲಿ ಹತ್ತುದಿನವಾದರೂ ಆತ ಸಿಕ್ಕಿರಲಿಲ್ಲ. ಕೊನೆಗೂ ಪೊಲೀಸ್ ಬಲೆಗೆ ಸ್ಯಾಂಟ್ರೂ ರವಿ ಬಿದ್ದಿದ್ದಾನೆ. ಕಳೆದ 11 ದಿನಗಳಿಂದ ತಲೆಮರೆಸಿಕೊಂಡಿದ್ದ ಸ್ಯಾಂಟ್ರೋ ರವಿಯನ್ನು ದೂರದ ಗುಜರಾತ್ನಲ್ಲಿ ಕರ್ನಾಟಕ ಪೊಲೀಸರ ಸೆರೆಯಾಗಿದ್ದಾನೆ. ಈ ವಿಷಯವನ್ನು ಎಡಿಜಿಪಿ ಅಲೋಕ್ ಕುಮಾರ್ ದೃಢಪಡಿಸಿದ್ದಾರೆ.
ಸ್ಯಾಂಟ್ರೊ ರವಿ ವಿರುದ್ಧ ಎಫ್ಐಆರ್ : 2ನೇ ಪತ್ನಿ ನೀಡಿದ್ದ ದೂರಿನ ಆಧಾರದಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದರು. ವಿವಿಧ ತಂಡಗಳನ್ನು ರಚಿಸಿ ಪತ್ತೆಗಾಗಿ ಕಾರ್ಯಾಚರಣೆ ನಡೆಸಿದ್ದರು. ಜ.2ರಂದು ಇಲ್ಲಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಆರೋಪಿಯನ್ನು ಬಂಧಿಸದಿರುವುದಕ್ಕೆ ವಿವಿಧ ಸಂಘಟನೆಗಳಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಪ್ರತಿಭಟನೆಗಳೂ ನಡೆದಿದ್ದವು. ವಿವಾಹಿತ ಎಂಬುದನ್ನು ಮುಚ್ಚಿಟ್ಟು, ಪರಿಶಿಷ್ಟ ಸಮುದಾಯದ ಮಹಿಳೆಯನ್ನು ವಂಚಿಸಿ ಮದುವೆಯಾಗಿ, ಜಾತಿ ನಿಂದನೆ ಮಾಡಿ, ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿ, ವರದಕ್ಷಿಣೆ ಕಿರುಕುಳ ನೀಡಿ, ಸುಳ್ಳು ಪ್ರಕರಣ ದಾಖಲಿಸಿದ ಆರೋಪದ ಮೇರೆಗೆ ಪ್ರಕರಣ ದಾಖಲಾಗಿತ್ತು.
ನಗರದ ಸಂತ್ರಸ್ತ ಮಹಿಳೆ ಹಾಗೂ ಅವರ ಕುಟುಂಬದ ಸದಸ್ಯರು ಒಡನಾಡಿ ಸೇವಾ ಸಂಸ್ಥೆಯ ನೆರವು ಪಡೆದು ದೂರು ದಾಖಲಿಸಿದ್ದರು. ವರದಕ್ಷಿಣೆ ನಿಷೇಧ ಕಾಯ್ದೆ, ಪರಿಶಿಷ್ಟರ ಮೇಲಿನ ದೌರ್ಜನ್ಯ ನಿಯಂತ್ರಣ ಕಾಯ್ದೆ, ಐಪಿಸಿ 506 (ಉದ್ದೇಶಪೂರ್ವಕ ಅವಹೇಳನ, ಮನಶಾಂತಿ ಕೆಡಿಸುವ ಪ್ರಯತ್ನ), 504 (ಕ್ರಿಮಿನಲ್ ಪಿತೂರಿ), 376 (ಅತ್ಯಾಚಾರ), 270 (ಪ್ರಾಣಹಾನಿಕರವಾದ ಸೋಂಕು ಹರಡುವ ಯತ್ನ), ಬಲವಂತದ ಗರ್ಭಪಾತ (313) ಹಾಗೂ 323 (ಹಲ್ಲೆ), 498ಎ (ಕೌಟುಂಬಿಕ ದೌರ್ಜನ್ಯ) ಅಡಿ ಪ್ರಕರಣ ದಾಖಲಿಸಲಾಗಿತ್ತು.
Discussion about this post