ಮಂಗಳೂರು, ಜ. 13: ಮುಲ್ಕಿಯ ಅಂಗಾರಗುಡ್ಡೆ ಎಂಬಲ್ಲಿ ಕೃಷಿಕರೊಬ್ಬರ ಮೇಲೆ ಸುಲಿಗೆಗಾಗಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಮೂವರು ಆರೋಪಿಗಳ ವಿರುದ್ಧ ಮುಲ್ಕಿ ಪೊಲೀಸರು ಕೋಕಾ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ಕೆರೆಕಾಡು ನಿವಾಸಿ ಶ್ಯಾಮ್ ಸುಂದರ್ ಶೆಟ್ಟಿ, ಆಕಾಶ್ ಪೂಜಾರಿ ಮತ್ತು ಸುವೀನ್ ಎಂಬುವವರ ವಿರುದ್ಧ ಕೋಕಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.
ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿ ಸುವೀನ್ ವಿರುದ್ಧ ಒಂದು ಕೊಲೆ ಪ್ರಕರಣ, ಎರಡು ಕೊಲೆ ಯತ್ನ, ಒಂದು ದರೋಡೆ ಮತ್ತು ಒಂದು ಗಾಂಜಾ ಪ್ರಕರಣ ದಾಖಲಾಗಿತ್ತು. ಮತ್ತೋರ್ವ ಆರೋಪಿ ಆಕಾಶ್ ವಿರುದ್ಧ ಕೊಲೆ ಯತ್ನ, ಜಾತಿ ನಿಂದನೆ ಮತ್ತು ಸರ್ಕಾರಿ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣಗಳು ದಾಖಲಾಗಿವೆ. ಈ ಇಬ್ಬರೂ ಆರೋಪಿಗಳ ವಿರುದ್ಧದ ಹಲವು ಪ್ರಕರಣಗಳು ನ್ಯಾಯಾಲಯದಲ್ಲಿ ಇನ್ನೂ ಬಾಕಿ ಇವೆ.
ಆರೋಪಿಗಳ ವಿರುದ್ಧ ಸರಣಿ ಕ್ರಿಮಿನಲ್ ಪ್ರಕರಣಗಳು ದಾಖಲಾಗಿರುವ ಹಿನ್ನೆಲೆಯಲ್ಲಿ, ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೋಕಾ ಕಾಯ್ದೆಯನ್ನು ಜಾರಿಗೊಳಿಸಲಾಗಿದೆ ಮತ್ತು ಮುಂದಿನ ಕಾನೂನು ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದು ಪೊಲೀಸ್ ಕಮಿಷನರ್ ತಿಳಿಸಿದ್ದಾರೆ.
Discover more from Coastal Times Kannada
Subscribe to get the latest posts sent to your email.







Discussion about this post