ಸುರತ್ಕಲ್: ಉದ್ಯಮಿಯೊಬ್ಬರ ಖಾಸಗಿ ಮಾಹಿತಿಯನ್ನು ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸುವ ಬೆದರಿಕೆ ಹಾಕಿ, ಚಿನ್ನ ಹಾಗೂ ಹಣಕ್ಕಾಗಿ ಬೇಡಿಕೆ ಇಟ್ಟ ಆರೋಪದ ಮೇಲೆ ಅಖಿಲ ಭಾರತ ಹಿಂದೂ ಮಹಾಸಭಾದ ಕರ್ನಾಟಕ ಘಟಕದ ಅಧ್ಯಕ್ಷ ರಾಜೇಶ್ ಪವಿತ್ರನ್ ಎಂಬುವರನ್ನು ಸುರತ್ಕಲ್ ಠಾಣೆಯ ಪೊಲೀಸರು ಬುಧವಾರ ರಾತ್ರಿ ಬಂಧಿಸಿದ್ದಾರೆ.

‘ಕಾವೂರು ನಿವಾಸಿ ಸುರೇಶ್ ಎಂಬವರು ಸುರತ್ಕಲ್ನಲ್ಲಿ ರಾಜೇಶ್ ಪವಿತ್ರನ್ ಜೊತೆ ಪಾಲುದಾರಿಕೆಯಲ್ಲಿ ಸ್ಯಾಫ್ರಾನ್ ಇಂಟರ್ ನ್ಯಾಷನಲ್ ಟ್ರೇಡಿಂಗ್ ಎಂಬ ವ್ಯವಹಾರ ನಡೆಸಲು ಮುಂದಾಗಿದ್ದರು. ಆದರೆ ರಾಜೇಶ್ ಪವಿತ್ರನ್ ಅವ್ಯವಹಾರಗಳು ಗಮನಕ್ಕೆ ಬಂದುದರಿಂದ ಪಾಲುದಾರಿಕೆಯಿಂದ ಹೊರ ಬರಲು ನಿರ್ಧರಿಸಿದ್ದರು.’

‘ಇದರಿಂದ ಆಕ್ರೋಶಗೊಂಡ ಆರೋಪಿಯು ಸುರೇಶ್ ಅವರ ಲ್ಯಾಪ್ ಟಾಪ್ ವಶಕ್ಕೆ ಪಡೆದು ಹೆಚ್ಚುವರಿ ಹಣ ನೀಡಬೇಕು. ಇಲ್ಲದಿದ್ದಲ್ಲಿ ಅದರಲ್ಲಿರುವ ಎಲ್ಲಾ ಖಾಸಗಿ ಮಾಹಿತಿ ಬಹಿರಂಗ ಪಡಿಸುತ್ತೇನೆ. ಮಾತ್ರವಲ್ಲ ಕೈ, ಕಾಲು ಕಡಿದು ಹಾಕುತ್ತೇನೆ ಎಂದು ಬೆದರಿಕೆ ಹಾಕಿದ್ದ. ಈ ಬಗ್ಗೆ ಸುರೇಶ್ ಅವರು ಸುರತ್ಕಲ್ ಠಾಣೆಗೆ ದೂರು ನೀಡಿದ್ದರು. ಅದರ ಆಧಾರದಲ್ಲಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಆರೋಪಿಗೆ ನೆರವು ನೀಡಿದ ಆರೋಪದಲ್ಲಿ ಡಾ.ಸನಿಜ ಎಂಬಾಕೆಯ ವಿರುದ್ಧವೂ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
Discover more from Coastal Times Kannada
Subscribe to get the latest posts sent to your email.








Discussion about this post