ಮಂಗಳೂರು, ಜೂ.16: ದ.ಕ.ಜಿಲ್ಲೆಯಲ್ಲಿ ಮತೀಯ ದುಷ್ಕರ್ಮಿಗಳಿಂದ ಕೊಲೆಯಾದ ನಾಲ್ಕು ಮಂದಿಯ ಕುಟುಂಬಗಳಿಗೆ ಮುಖ್ಯಮಂತ್ರಿಯ ಪರಿಹಾರ ನಿಧಿಯಿಂದ ತಲಾ 25 ಲಕ್ಷ ರೂ. ಪರಿಹಾರ ಘೋಷಿಸಿ ರಾಜ್ಯ ಸರಕಾರ ಶುಕ್ರವಾರ ಆದೇಶ ಹೊರಡಿಸಿದೆ.
2022ರ ಜುಲೈ 19ರಂದು ಬೆಳ್ಳಾರೆಯಲ್ಲಿ ಕೊಲೆಯಾಗಿದ್ದ ಮಸೂದ್, 2022ರ ಜುಲೈ 28ರಂದು ಕೊಲೆಯಾಗಿದ್ದ ಸುರತ್ಕಲ್ನ ಕಾಟಿಪಳ್ಳದ ಮೊಹಮ್ಮದ್ ಫಾಜಿಲ್, 2022ರ ಡಿಸೆಂಬರ್ 24ರಂದು ಕೊಲೆಯಾಗಿದ್ದ ಕಾಟಿಪಳ್ಳದ ಅಬ್ದುಲ್ ಜಲೀಲ್ ಹಾಗೂ 2018ರ ಜನವರಿ 3ರಂದು ಕೊಲೆಯಾಗಿದ್ದ ಕಾಟಿಪಳ್ಳದ ದೀಪಕ್ ರಾವ್ ಅವರ ಕುಟುಂಬದವರಿಗೆ ಪರಿಹಾರ ಘೋಷಣೆ ಆಗಿದೆ.
ಮುಖ್ಯಮಂತ್ರಿ ಅವರ ಪರಿಹಾರ ನಿಧಿಯಿಂದ ಈ ಹಣ ಮಂಜೂರು ಮಾಡಿ ಮುಖ್ಯಮಂತ್ರಿ ಅವರು ಆದೇಶಿಸಿದ್ದಾರೆ. ಮೃತರ ಕುಟುಂಬ ವರ್ಗದವರಿಗೆ ಇದೇ 19ರಂದು ಬೆಳಿಗ್ಗೆ 8 ಗಂಟೆಗೆ ಬೆಂಗಳೂರಿನಲ್ಲಿರುವ ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಅವರು ಪರಿಹಾರದ ಚೆಕ್ ವಿತರಿಸಲಿದ್ದಾರೆ. ಮೃತರ ಕುಟುಂಬದವರೊಂದಿಗೆ ಹಾಜರಿರಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯು ತಹಶೀಲ್ದಾರರಿಗೆ ಪತ್ರ ಬರೆದು ಸೂಚಿಸಿದ್ದಾರೆ.
2022ರ ಜುಲೈ ತಿಂಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರು ಕೊಲೆಗಳು ನಡೆದಿದ್ದವು. ಪ್ರವೀಣ್ ನೆಟ್ಟಾರು ಕುಟುಂಬದವರಿಗೆ ಮಾತ್ರ ಅಂದಿನ ಬಿಜೆಪಿ ನೇತೃತ್ವದ ಸರ್ಕಾರ ರೂ.25 ಲಕ್ಷ ಪರಿಹಾರ ನೀಡಿತ್ತು. ಉಳಿದವರ ಕುಟುಂಬದವರಿಗೂ ಪರಿಹಾರ ನೀಡಬೇಕು ಎಂಬ ಒತ್ತಾಯ ಕೇಳಿ ಬಂದಿತ್ತು.
Discover more from Coastal Times Kannada
Subscribe to get the latest posts sent to your email.








Discussion about this post