ಉಳ್ಳಾಲ: ಉಳ್ಳಾಲ ನಗರಸಭಾ ವ್ಯಾಪ್ತಿಯ ಕಲ್ಲಾಪು ಶಾಂತಿಗುಡ್ಡೆ ಬಳಿ ತಡೆಗೋಡೆ ನಿರ್ಮಾಣ ಕಾಮಗಾರಿ ಸಂದರ್ಭ ಗುಡ್ಡ ಕುಸಿದು ಕಾರ್ಮಿಕ ಸಾವನ್ನಪ್ಪಿರುವ ಘಟನೆ ಮಂಗಳವಾರ (ಡಿ.16) ನಡೆದಿದೆ. ಕೂಳೂರಿನಲ್ಲಿ ವಾಸವಾಗಿರುವ ಮೂಲತಃ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕು ಹನುಮಕಟ್ಟೆ ನಿವಾಸಿ ಬಾಳಪ್ಪ (35) ಮೃತ ವ್ಯಕ್ತಿ.


ಸೇವಂತಿಗುತ್ತುವಿನಲ್ಲಿ ಗೌತಮ್ ರಾಜ್ ಎಂಬವರು ಇತ್ತೀಚಿಗೆ ಮನೆಯೊಂದನ್ನು ಖರೀದಿಸಿದ್ದರು. ಮನೆಯ ಹಿಂಭಾಗಕ್ಕೆ ತಾಗಿಕೊಂಡು ಎತ್ತರದ ಗುಡ್ಡವೊಂದಿದ್ದು, ಕಳೆದ ಮಳೆಗಾಲದಲ್ಲಿ ಸುರಿದಿದ್ದ ಭಾರೀ ಮಳೆಗೆ ಗುಡ್ಡದ ಮಣ್ಣು ಕುಸಿತವಾಗಿತ್ತು. ಗೌತಮ್ ರಾಜ್ ಅವರು ಕಳೆದ ಕೆಲ ದಿನಗಳ ಹಿಂದಷ್ಟೆ ಮನೆಯ ಹಿಂಭಾಗದಲ್ಲಿ ತಡೆಗೋಡೆ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಂಡಿದ್ದರು. ಮಂಗಳವಾರದಂದು ಜೆಸಿಬಿ ಸಹಿತ ವಲಸೆ ಕಾರ್ಮಿಕರಾದ ಬಾಳಪ್ಪ, ಹನುಮಂತ, ಭೀಮಪ್ಪ, ಶಿವು ಎಂಬವರು ತಡೆಗೋಡೆ ನಿರ್ಮಾಣ ಕಾಮಗಾರಿಯಲ್ಲಿ ತೊಡಗಿದ್ದರು. ಈ ವೇಳೆ ಮನೆಯ ಹಿಂಭಾಗದ ಎತ್ತರದ ಗುಡ್ಡದ ಮಣ್ಣು ಏಕಾಏಕಿ ಕುಸಿದು ಬಿದ್ದಿದೆ. ಇದರಿಂದ ಕಾರ್ಮಿಕರಾದ ಬಾಳಪ್ಪ, ಹನುಮಂತ, ಭೀಮಪ್ಪ ಮಣ್ಣಿನಡಿ ಸಿಲುಕಿದ್ದಾರೆ. ಹನುಮಂತ ಮತ್ತು ಭೀಮಪ್ಪ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದು, ಮಣ್ಣಿನಡಿ ಬಿದ್ದು ಗಂಭೀರ ಗಾಯಗೊಂಡಿದ್ದ ಬಾಳಪ್ಪ ಅವರನ್ನು ಸ್ಥಳೀಯರು ಹರಸಾಹಸ ಪಟ್ಟು ಹೊರ ತೆಗೆದರೂ ಆ ವೇಳೆಗೆ ಅವರು ಸಾವನ್ನಪ್ಪಿದ್ದಾರೆ.
ಸ್ಥಳಕ್ಕೆ ಎಸ್ಡಿಆರ್ಎಫ್, ಅಗ್ನಿಶಾಮಕ ದಳ, ಎಸಿಪಿ ವಿಜಯಕ್ರಾಂತಿ, ಉಳ್ಳಾಲ ಪೊಲೀಸ್ ನಿರೀಕ್ಷವಿರೂಪಾಕ್ಷ ಸ್ವಾಮಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Discover more from Coastal Times Kannada
Subscribe to get the latest posts sent to your email.







Discussion about this post