ನೆಲ್ಯಾಡಿ : ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಗ್ರಾಮದ ಶಿರಾಡಿ ಹಾಗೂ ಅಡ್ಡಹೊಳೆ ಪೇಟೆಯಲ್ಲಿ ಸರ್ವೀಸ್ ರಸ್ತೆ ನಿರ್ಮಾಣ, ಹೆದ್ದಾರಿಯ ಹಲವು ಕಡೆಗಳಲ್ಲಿ ತಡೆಗೋಡೆ ರಚನೆ, ಸಂಪರ್ಕ ರಸ್ತೆ ನಿರ್ಮಾಣ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮಾ.16ರಂದು ಬೆಳಿಗ್ಗೆ ಗ್ರಾಮಸ್ಥರು ಶಿರಾಡಿ ಪೇಟೆಯಲ್ಲಿ ಪ್ರತಿಭಟನೆ ನಡೆಸಿದರು. ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಆಗಮಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಲಿಂಗೇ ಗೌಡರವರು ಬಹುತೇಕ ಬೇಡಿಕೆಗೆ ಒಪ್ಪಿಗೆ ಸೂಚಿಸಿದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಪ್ರತಿಭಟನೆ ಹಿಂತೆಗೆದುಕೊಂಡರು.
ಬೆಳಿಗ್ಗೆ ಶಿರಾಡಿ ಪೇಟೆಯಲ್ಲಿ ಜನಾಗ್ರಹ ಸಭೆ ನಡೆಸಿದ ಗ್ರಾಮಸ್ಥರು ಹಾಗೂ ಜನಪ್ರತಿನಿಧಿಗಳು ಬಳಿಕ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲು ಮುಂದಾದರು. ಈ ವೇಳೆ ಸ್ಥಳದಲ್ಲಿದ್ದ ಉಪ್ಪಿನಂಗಡಿ ಎಸ್.ಐ.ರಾಜೇಶ್ ಕೆ.ವಿ., ರಾಷ್ಟ್ರೀಯ ಹೆದ್ದಾರಿ ಭೂ ಸ್ವಾಧೀನಾಧಿಕಾರಿ ಮಂಜುನಾಥ್ ಹಾಗೂ ಇತರೇ ಅಧಿಕಾರಿಗಳು ರಸ್ತೆ ತಡೆ ನಡೆಸಲು ಮುಂದಾದ ಗ್ರಾಮಸ್ಥರು ಹಾಗೂ ಜನಪ್ರತಿನಿಧಿಗಳನ್ನು ತಡೆದು ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರೂ ಬರುತ್ತಿದ್ದು ಸಮಸ್ಯೆಗೆ ಪರಿಹಾರ ನೀಡಲಿದ್ದಾರೆ ಎಂದು ಹೇಳಿ ಮನವೊಲಿಸಿದರು. ಈ ವೇಳೆ ಗ್ರಾಮಸ್ಥರು ಘೋಷಣೆ ಕೂಗಲಾರಂಭಿಸಿದರು.


ಮಧ್ಯಾಹ್ನ ಸುಮಾರು 12.30ರ ವೇಳೆಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಲಿಂಗೇ ಗೌಡರವರು ಸ್ಥಳಕ್ಕೆ ಆಗಮಿಸಿ ಗ್ರಾಮಸ್ಥರ ಮನವಿ ಸ್ವೀಕರಿಸಿ ಮಾತನಾಡಿ, ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಮೊದಲೇ ಅಂದಾಜುಪಟ್ಟಿ ಮಾಡಲಾಗಿದ್ದು ಅದನ್ನು ಈಗ ಬದಲಾವಣೆ ಮಾಡಲು ಸಾಧ್ಯವಿಲ್ಲ. ಸರಕಾರದಿಂದ ದೊರೆತ ಅನುಮೋದನೆಯಾದಂತೆ ರಸ್ತೆ ನಿರ್ಮಾಣ ಕೆಲಸ ಆಗುತ್ತಿದೆ. ಅಲ್ಲದೆ ಸದ್ರಿ ರಸ್ತೆ ಪಶ್ಚಿಮಘಾಟ್ನಲ್ಲಿ ಹಾದುಹೋಗುತ್ತಿದೆ. ಇಲ್ಲಿ ರಸ್ತೆಗೆ 30 ಮೀ. ಜಾಗ ಮಾತ್ರ ಬಳಕೆಗೆ ಅವಕಾಶ ನೀಡಲಾಗಿದೆ. ಅದರೊಳಗೆ ಚತುಷ್ಪಥ ರಸ್ತೆ ನಿರ್ಮಾಣ ಮಾಡಬೇಕಾಗಿದೆ. ಆದರೂ ಗ್ರಾಮಸ್ಥರ ಬೇಡಿಕೆಯಂತೆ ಸಂಪರ್ಕ ರಸ್ತೆ ಸೇರಿದಂತೆ ಸಣ್ಣಪುಟ್ಟ ಕೆಲಸ ಮಾಡಿಕೊಡಲು ಬದ್ಧರಾಗಿದ್ದೇವೆ ಎಂದರು. ಜನರ ಬೇಡಿಕೆಯಂತೆ ಶಿರಾಡಿ ಪೇಟೆಯ ಎರಡೂ ಬದಿ ಸರ್ವೀಸ್ ರಸ್ತೆ ಸಾಧ್ಯವಿಲ್ಲ. ಆಸ್ಪತ್ರೆ, ಚರ್ಚ್ ಸಂಪರ್ಕಿಸುವ ಬದಿಯಲ್ಲಿ ಸರ್ವೀಸ್ ರಸ್ತೆ ಮಾಡಿಕೊಡುತ್ತೇವೆ. ಇದಕ್ಕೆ ಬೇಕಾದ ಜಾಗ ಸ್ಥಳೀಯರು ಬಿಟ್ಟುಕೊಡಬೇಕೆಂದು ಹೇಳಿದರು.

ಉದನೆ ಸೈಂಟ್ ಆಂಟನೀಸ್ ಪ್ರೌಢಶಾಲೆಯ ಆಟದ ಮೈದಾನದ ಮುಂದೆ ಶಾಲೆಯವರ ಬೇಡಿಕೆಯಂತೆ ತಡೆಗೋಡೆ ನಿರ್ಮಿಸುವುದಾಗಿಯೂ ಅವರು ಹೇಳಿದರು. ಬಳಿಕ ಯೋಜನಾ ನಿರ್ದೇಶಕ ಲಿಂಗೇ ಗೌಡರವರು ಶಿರಾಡಿಯಲ್ಲಿ ಸರ್ವೀಸ್ ರಸ್ತೆಗೆ ಅವಶ್ಯಕವಿರುವ ಜಾಗದ ಪರಿಶೀಲನೆಯೂ ನಡೆಸಿದರು. ನಂತರ ಅವರು ಶಿರಾಡಿ ಪ್ರಾಥಮಿಕ ಆರೋಗ್ಯ ಕೇಂದ್ರ ಸಂಪರ್ಕಿಸುವ ರಸ್ತೆ, ಶಿರಾಡಿ ಚರ್ಚ್, ಅಡ್ಡಹೊಳೆ ಅಯ್ಯಪ್ಪ ದೇವಸ್ಥಾನ, ಅಡ್ಡಹೊಳೆ ಚರ್ಚ್ಗೆ ಸಂಪರ್ಕ ಕಲ್ಪಿಸುವ ಸಂಪರ್ಕ ರಸ್ತೆಗಳ ಪರಿಶೀಲನೆ ನಡೆಸಿ ಇಲಾಖೆಯ ಇಂಜಿನಿಯರ್ಗಳಿಗೆ ಸೂಕ್ತ ನಿರ್ದೇಶನ ನೀಡಿದರು. ಈ ವೇಳೆ ಜನಪ್ರತಿನಿಧಿಗಳು, ಗ್ರಾಮಸ್ಥರು, ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಉಪಸ್ಥಿತರಿದ್ದರು.

ಜನಾಗ್ರಹ ಸಭೆ: ಯೋಜನಾ ನಿರ್ದೇಶಕ ಲಿಂಗೇ ಗೌಡರ ಭೇಟಿಗೂ ಮೊದಲು ನಡೆದ ಜನಾಗ್ರಹ ಸಭೆಯಲ್ಲಿ ಉದನೆ ಸೈಂಟ್ ಆಂಟನೀಸ್ ಪ್ರೌಢಶಾಲೆಯ ಸಂಚಾಲಕರಾದ ರೆ.ಫಾ.ಹನಿ ಜೇಕಬ್, ನಿವೃತ್ತ ಮುಖ್ಯಶಿಕ್ಷಕ ಚಾಕೋ ವರ್ಗೀಸ್, ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ಕುಮಾರ್, ಜಿ.ಪಂ.ಮಾಜಿ ಸದಸ್ಯರಾದ ಪಿ.ಪಿ.ವರ್ಗೀಸ್, ಸರ್ವೋತ್ತಮ ಗೌಡ, ತಾ.ಪಂ.ಮಾಜಿ ಸದಸ್ಯೆ ಆಶಾಲಕ್ಷ್ಮಣ್, ಶಿರಾಡಿ ಗ್ರಾ.ಪಂ.ಅಧ್ಯಕ್ಷೆ ವಿನಿತಾತಂಗಚ್ಚನ್, ಸದಸ್ಯ ಎಂ.ಕೆ.ಪೌಲೋಸ್ರವರು ಮಾತನಾಡಿದರು. ಶಿರಾಡಿ ಸಂತಸೆಬಾಸ್ಟಿನ್ ಚರ್ಚ್ನ ವಿಕಾರ್ ಫಾ.ಸನೀಶ್, ರೆ.ಫಾ.ಜೈಸನ್, ರೆ.ಫಾ.ಜೋಸೆಫ್ ಅಡ್ಡಹೊಳೆ, ಕೆಪಿಸಿಸಿ ಸುಳ್ಯ ಬ್ಲಾಕ್ ಉಸ್ತುವಾರಿ ನಂದಕುಮಾರ್, ಕೆಪಿಸಿಸಿ ಸದಸ್ಯ ಕೆ.ಪಿ.ತೋಮಸ್, ಬಿಳಿನೆಲೆ ಗ್ರಾ.ಪಂ.ಅಧ್ಯಕ್ಷ ಶಿವಶಂಕರ್, ಶಿರಾಡಿ ಗ್ರಾ.ಪಂ.ಉಪಾಧ್ಯಕ್ಷ ಕಾರ್ತಿಕೇಯನ್, ಸದಸ್ಯ ಸಣ್ಣಿಜಾನ್, ಗೋಳಿತ್ತೊಟ್ಟು ಗ್ರಾ.ಪಂ.ಮಾಜಿ ಅಧ್ಯಕ್ಷ ಪೂವಪ್ಪ ಕರ್ಕೇರ, ನೆಲ್ಯಾಡಿ ಗ್ರಾ.ಪಂ.ಮಾಜಿ ಸದಸ್ಯ ಕೆ.ಪಿ.ಅಬ್ರಹಾಂ ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು. ಉಪ್ಪಿನಂಗಡಿ ಪೊಲೀಸರು ಸೂಕ್ತ ಬಂದೋಬಸ್ತ್ ಕೈಗೊಂಡಿದ್ದರು.
Discover more from Coastal Times Kannada
Subscribe to get the latest posts sent to your email.








Discussion about this post