ಹಾಸನ: ‘ಬಿಜೆಪಿಯ ಬಿ ಟೀಂ ಜೆಡಿಎಸ್ಗೆ ಯಾವುದೇ ಪಕ್ಷ ಬಹುಮತದೊಂದಿಗೆ ಅಧಿಕಾರಕ್ಕೆ ಬರಬಾರದು. ಯಾವಾಗಲೂ ಹೊಂದಾಣಿಕೆಗೆ ಕಾಯುತ್ತಿರುತ್ತಾರೆ’ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದರು.
ನಗರದ ಹೇಮಾವತಿ ಪ್ರತಿಮೆ ಬಳಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಭಾನುವಾರ ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು, ‘ಜೆಡಿಎಸ್ನವರು 30 ಸ್ಥಾನ ಗೆದ್ದರೆ ಸಾಕು ಅಂತಾರೆ. ಹಿಂದೆ ಉತ್ತಮ ಆಡಳಿತ ನೀಡಲಿ ಎಂಬ ಕಾರಣಕ್ಕೆ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಲಾಯಿತು. ಕೊಟ್ಟ ಕುದುರೆ ಏರದವನು ಶೂರನೂ ಅಲ್ಲ; ಧೀರನೂ ಅಲ್ಲ ಎಂಬಂತೆ ನನ್ನಿಂದ ಸಮ್ಮಿಶ್ರ ಸರ್ಕಾರ ಬಿದ್ದು ಹೋಯಿತು ಎಂದು ಆರೋಪ ಮಾಡಿದ್ದಾರೆ. ಸರ್ಕಾರ ಬೀಳಲು ಅವರೇ ಕಾರಣ. ಶಾಸಕರ ಕಷ್ಟ, ಸುಖ ಕೇಳಿದ್ದರೆ ಸರ್ಕಾರ ಬೀಳುತ್ತಿರಲಿಲ್ಲ’ ಎಂದು ಕುಟುಕಿದರು.
‘ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಏಕೆ ಬಂಧಿಸಬೇಕು? ಹಿಂದೆ ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿಯೂ ಹೀಗೆ ಮಾಡಿದ್ದೀರಾ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಹೇಳುತ್ತಾರೆ. ಇದಕ್ಕೆ ಜೆಡಿಎಸ್ ಬಿಜೆಪಿಯ ಬಿ ಟೀಂ ಎನ್ನುವುದು’ ಎಂದು ವ್ಯಂಗ್ಯವಾಡಿದರು.
‘ಬಿಜೆಪಿ ದುರಾಡಳಿತ ಮುಚ್ಚಿ ಹಾಕಲು ಕೋಮುವಾದ ಸೃಷ್ಟಿ ಮಾಡಿದ್ದಾರೆ. ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ. ಕೈ ಮುಗಿದು ಪ್ರಾರ್ಥಿಸುವೆ. ಮೊದಲು ಬಿಜೆಪಿಯನ್ನು ಅಧಿಕಾರದಿಂದ ಕಿತ್ತು ಹಾಕಿ’ ಎಂದು ನೆರೆದಿದ್ದ ಜನಸ್ತೋಮಕ್ಕೆ ಮನವಿ ಮಾಡಿದರು.
ಸಭೆಯಲ್ಲಿ ಮುಖಂಡ ಚಂದ್ರಪ್ಪ, ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಜಾವಗಲ್ ಮಂಜುನಾಥ್, ಮುಖಂಡರಾದ ಎಂ.ಎ.ಗೋಪಾಲಸ್ವಾಮಿ, ಜವರೇಗೌಡ, ಎಚ್.ಕೆ.ಮಹೇಶ್, ಸಿ.ಎಸ್.ಪುಟ್ಟೇಗೌಡ, ಬಿ.ಶಿವರಾಂ, ಯುವ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ರಂಜಿತ್ ಗೊರೂರು ಇದ್ದರು.
Discover more from Coastal Times Kannada
Subscribe to get the latest posts sent to your email.
Discussion about this post