ಮಂಗಳೂರು: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಗೇರು ಅಥವಾ ಗೋಡಂಬಿ ಬೆಳೆ ಅಭಿವೃದ್ಧಿಗೆ ಅಪಾರ ಅವಕಾಶಗಳಿದ್ದು, ಗುಣಮಟ್ಟದ ಗೋಡಂಬಿ ಸಸಿಗಳನ್ನು ಬೆಳೆಸಿ ರೈತರಿಗೆ ವಿತರಿಸಲು ಗೇರು ಅಭಿವೃದ್ಧಿ ನಿಗಮಕ್ಕೆ 1ಕೋಟಿ ರೂ. ಅನುದಾನ ನೀಡಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಬಿ. ಖಂಡ್ರೆ ತಿಳಿಸಿದ್ದಾರೆ.
ನಗರದ ಕದ್ರಿ ಉದ್ಯಾನವನದಲ್ಲಿ ಭಾನುವಾರ ಗೇರು ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ಅರಣ್ಯ ಇಲಾಖೆಯ ವತಿಯಿಂದ ಆಯೋಜಿಸಿದ್ದ ಗೇರು ಮೇಳಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಎಂಡೋಸಲ್ಫಾನ್ ಅನಾಹುತದ ಬಳಿಕ ಹಲವು ರೈತರು ಗೇರು ಬೆಳೆಯಿಂದ ವಿಮುಖರಾಗಿದ್ದು, ಅವರಿಗೆ ಮತ್ತೆ ಉತ್ತೇಜನ ನೀಡಿ ಗೇರು ಬೆಳೆಯ ಗತವೈಭವವನ್ನು ಮರಳಿ ತರುವ ಕಾರ್ಯ ಕೈಗೊಳ್ಳಲಾಗುವುದು ಎಂದು ಹೇಳಿದರು. ಆಸಕ್ತ ರೈತರಿಗೆ ನಿಗಮದ ನರ್ಸರಿಗಳಲ್ಲೇ ಕಸಿ ಮಾಡಿದ ಗುಣಮಟ್ಟದ ಗೋಡಂಬಿ ಸಸಿಗಳನ್ನು ಬೆಳೆಸಿ ಪೂರೈಸಲು ಸೂಚನೆ ನೀಡಲಾಗಿದೆ. 1 ಕೋಟಿ ರೂ. ವೆಚ್ಚದಲ್ಲಿ ಸಸಿಗಳನ್ನು ಬೆಳೆಸಿ ಮುಂದಿನ ವರ್ಷದಿಂದ ರೈತರಿಗೆ ಸಬ್ಸಿಡಿ ದರದಲ್ಲಿ ವಿತರಿಸಲಾಗುವುದು ಎಂದು ತಿಳಿಸಿದರು.
ಗೇರು ಮೌಲ್ಯವರ್ಧನೆಗೆ ಒತ್ತು ನೀಡಿದರೆ ರೈತರಿಗೆ ಹೆಚ್ಚಿನ ಆದಾಯ ಲಭಿಸಲಿದೆ. ಉತ್ಪಾದನಾ ವೆಚ್ಚ ಕಡಿಮೆಯಾಗುವುದರ ಜೊತೆಗೆ ಲಾಭವೂ ಹೆಚ್ಚಾಗಲಿದೆ ಎಂದು ಹೇಳಿದರು. ಪ್ರಸ್ತುತ ರಾಜ್ಯದಲ್ಲಿ ಕಚ್ಚಾ ಗೇರು ಬೀಜವನ್ನು ಆಮದು ಮಾಡಿಕೊಂಡು ಸಂಸ್ಕರಿಸುವ ಪರಿಸ್ಥಿತಿ ಇರುವುದರಿಂದ, ರೈತರಿಗೆ ಮಾಹಿತಿ ಹಾಗೂ ರಿಯಾಯಿತಿ ದರದಲ್ಲಿ ಸಸಿಗಳನ್ನು ನೀಡಿ ಕರ್ನಾಟಕವನ್ನು ಗೇರು ಕ್ಷೇತ್ರದಲ್ಲಿ ಸ್ವಾವಲಂಬಿಯನ್ನಾಗಿ ಮಾಡುವ ಗುರಿ ಹೊಂದಲಾಗಿದೆ ಎಂದು ಸಚಿವರು ಹೇಳಿದರು.
ಕಾರ್ಯಕ್ರಮದಲ್ಲಿ ಶಾಸಕ ಅಶೋಕ್ ರೈ, ಉಮಾನಾಥ ಕೋಟ್ಯಾನ್, ರಮಾನಾಥ ರೈ, ಎಸಿಎಫ್ ವಿ. ಕರಿಕಾಲನ್, ಗೇರು ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಕಮಲ ಕರಿಕಾಲನ್, ಉಪ ಅರಣ್ಯ ಸಂರಕ್ಷಣಾಧಿಕಾರಿ ರವೀಂದ್ರ ಕುಮಾರ್ ಡಿ.ಎನ್., ಸದಾಶಿವ ಉಳ್ಳಾಲ್, ಭರತ್ ಮುಂಡೋಡಿ, ಸದಾನಂದ ಮಾವಜಿ, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ವಿಜಯ ಕುಮಾರ್ ರೈ, ಜಿಲ್ಲಾಧಿಕಾರಿ ದರ್ಶನ್ ಎಚ್.ವಿ., ಮನಪಾ ಆಯುಕ್ತ ರವಿಚಂದ್ರ ನಾಯಕ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
Discover more from Coastal Times Kannada
Subscribe to get the latest posts sent to your email.







Discussion about this post