ಮಂಗಳೂರು: ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ, ಹೈನುಗಾರಿಕೆ, ವಾರ್ತಾ ಮತ್ತು ಪ್ರಸಾರ ಇಲಾಖೆಯ ರಾಜ್ಯ ಸಚಿವ ಎಲ್. ಮುರುಗನ್ ಭಾನುವಾರ ನಗರದ ಬೈಕಂಪಾಡಿಯ ಮಂಜುಗಡ್ಡೆ ಘಟಕಗಳಿಗೆ ಭೇಟಿ ನೀಡಿದರು. ನಂತರ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಫಲಾನುಭವಿಗಳಿಗೆ ಶೀತಲೀಕರಣ ವಾಹನಗಳ ವಿತರಣೆ ಮಾಡಿದರು.
ಇದೇ ಸಂದರ್ಭದಲ್ಲಿ ಮೀನುಗಾರಿಕೆಯನ್ನು ವೀಕ್ಷಿಸಿದ ಅವರು, ಮೀನುಗಾರರ ಜೊತೆಗೆ ಸಂವಾದ ನಡೆಸಿದರು.
ಮತ್ಸ್ಯ ಉತ್ಪನ್ನಗಳ ರಫ್ತು ಹೆಚ್ಚಳಕ್ಕೆ ಆದ್ಯತೆ:
ಮೀನುಗಾರಿಕೆಗೆ ಉತ್ತೇಜನ ನೀಡುವ ಮೂಲಕ ಮೀನುಗಾರರ ಆರ್ಥಿಕ ಸಬಲೀಕರಣಕ್ಕೆ ಕೇಂದ್ರ ಸರ್ಕಾರ ಬದ್ಧವಾಗಿದೆ. ಈ ನಿಟ್ಟಿನಲ್ಲಿ ಮತ್ಸ್ಯೋತ್ಪನ್ನಗಳ ರಫ್ತು ಹೆಚ್ಚಳಕ್ಕೆ ಆದ್ಯತೆ ನೀಡಲಾಗುತ್ತಿದೆ ಎಂದು ಕೇಂದ್ರ ಮೀನುಗಾರಿಕೆ ರಾಜ್ಯ ಸಚಿವ ಮುರುಗನ್ ಹೇಳಿದರು.
ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನರೇಂದ್ರ ಮೋದಿ ನೇತೃತ್ವದ ಸರ್ಕಾರ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ ಆರಂಭಿಸಿದೆ. ಇದರಡಿ ಮೀನುಗಾರಿಕೆ, ಬಂದರು, ಸಂಸ್ಕರಣೆ, ಶೀತಲೀಕರಣ ಘಟಕಗಳ ಅಭಿವೃದ್ಧಿ ಮಾಡುವ ಮೂಲಕ ಮೀನಿನ ಉತ್ಪನ್ನಗಳ ರಫ್ತು ಹೆಚ್ಚಿಸಲಾಗುವುದು ಎಂದರು.
ದೇಶದಲ್ಲಿ 5 ಆಧುನಿಕ ಮೀನುಗಾರಿಕೆ ಬಂದರು ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ. ಒಳನಾಡು, ಸಮುದ್ರ ಮೀನುಗಾರಿಕೆ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು ಎಂದರು.
ರಾಜ್ಯದ ಮೀನುಗಾರಿಕೆ ಸಚಿವ ಎಸ್. ಅಂಗಾರ ಮಾತನಾಡಿ, ಕೇಂದ್ರ ಸರ್ಕಾರದ ಯೋಜನೆಗಳ ನೆರವಿನಿಂದ ರಾಜ್ಯದಲ್ಲಿ ಮೀನುಗಾರಿಕೆ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ ಎಂದು ತಿಳಿಸಿದರು.
ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲ ಸಾರಿಗೆ ಸಚಿವ ಎಸ್. ಅಂಗಾರ, ಸ್ಥಳೀಯ ಶಾಸಕ ಡಾ. ಭರತ್ ಶೆಟ್ಟಿ, ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ ನಿತಿನ್ ಕುಮಾರ್, ಮೀನುಗಾರಿಕೆ ಇಲಾಖೆ ನಿರ್ದೇಶಕರು, ಅಧಿಕಾರಿಗಳು ಇದ್ದರು.
Discussion about this post