ಮಂಗಳೂರು: ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ಗೆ ನಡೆಯಲಿರುವ ಚುನಾವಣೆಗೆ ಸ್ಪರ್ಧೆ ಬಯಸಿ, ದಕ್ಷಿಣ ಕನ್ನಡ ದ್ವಿಸದಸ್ಯ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಶನಿವಾರ ನಾಮಪತ್ರ ಸಲ್ಲಿಸಿದ್ದಾರೆ. ಈ ಮಧ್ಯೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಹೇಳಿದ್ದ ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಎನ್. ರಾಜೇಂದ್ರಕುಮಾರ್, ಚುನಾವಣೆಯಿಂದ ಹಿಂದೆ ಸರಿಯುವ ನಿರ್ಧಾರ ಪ್ರಕಟಿಸಿದ್ದಾರೆ.
ಈ ಮಧ್ಯೆ ಕಾಂಗ್ರೆಸ್ ಅಭ್ಯರ್ಥಿ ಇನ್ನೂ ಅಂತಿಮವಾಗಿಲ್ಲ. ಹಾಗಾಗಿ ಕಾಂಗ್ರೆಸ್ನಿಂದ ಎರಡನೇ ಸ್ಥಾನಕ್ಕೆ ಯಾರು ಸ್ಪರ್ಧಿಸಲಿದ್ದಾರೆ ಎನ್ನುವ ಕುತೂಹಲ ಕ್ಷೇತ್ರದ ಮತದಾರರದ್ದಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನವದೆಹಲಿಗೆ ತೆರಳಿದ್ದು, ಭಾನುವಾರ ಅಭ್ಯರ್ಥಿಯ ಆಯ್ಕೆ ಆಗುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಕಾಂಗ್ರೆಸ್ನಿಂದ 11 ಅಭ್ಯರ್ಥಿಗಳು ಟಿಕೆಟ್ಗಾಗಿ ಅರ್ಜಿ ಸಲ್ಲಿಸಿದ್ದಾರೆ. ಈ ಮಧ್ಯೆ ಎಂ.ಎನ್. ರಾಜೇಂದ್ರಕುಮಾರ್ ಅವರನ್ನೇ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿಸಲು ಉಡುಪಿ ಜಿಲ್ಲಾ ಘಟಕದ ಮುಖಂಡರು ಯೋಜನೆ ರೂಪಿಸಿದ್ದರು. ಆದರೆ, ರಾಜೇಂದ್ರಕುಮಾರ್ ಸ್ಪರ್ಧೆಯಿಂದ ಹಿಂದೆ ಸರಿದಿರುವುದರಿಂದ ಅಭ್ಯರ್ಥಿಯ ಆಯ್ಕೆ ಕಗ್ಗಂಟಾಗಿದೆ.
ಮೂಲಗಳ ಪ್ರಕಾರ ಮಂಜುನಾಥ ಭಂಡಾರಿ ಅವರ ಹೆಸರು ಅಂತಿಮವಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಮಧ್ಯೆ ಐವನ್ ಡಿಸೋಜ, ಪಿ.ವಿ. ಮೋಹನ್ ಕೂಡ ಎಐಸಿಸಿ ಮಟ್ಟದಲ್ಲಿ ಟಿಕೆಟ್ಗಾಗಿ ಲಾಬಿ ನಡೆಸಿದ್ದಾರೆ. ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಯವರಿಗೇ ಟಿಕೆಟ್ ನೀಡಬೇಕು ಎನ್ನುವ ಒತ್ತಾಯ ಮಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ.
Discover more from Coastal Times Kannada
Subscribe to get the latest posts sent to your email.
Discussion about this post