ಉಪ್ಪಿನಂಗಡಿ: ಇಬ್ಬರನ್ನು ಬಲಿ ಪಡೆದ ಕಾಡಾನೆಯನ್ನು ಸೆರೆಹಿಡಿದು ಅದನ್ನು ಬೇರೆ ಕಡೆಗೆ ಒಯ್ಯಲು ಯತ್ನಿಸುತ್ತಿದ್ದಾಗ ಅರಣ್ಯ ಇಲಾಖೆ ಅಧಿಕಾರಿಗಳ ವಾಹನದ ಮೇಲೆ ಕಲ್ಲು ತೂರಾಟ ನಡೆಸಿ ದಾಂಧಲೆ ಎಬ್ಬಿಸಿದ ಘಟನೆ ಕಡಬ ತಾಲೂಕಿನ ಕೊಂಬಾರಿನಲ್ಲಿ ನಡೆದಿದ್ದು ಪ್ರಕರಣ ಸಂಬಂಧಿಸಿ ಪೊಲೀಸರು ಏಳು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಕೊಂಬಾರು ಗ್ರಾಮದ ಕಮರಕಜ್ಜಿಮನೆ ಉಮೇಶ್, ರಾಜೇಶ್ ಕನ್ನಡ, ಜನಾರ್ದನ್ ರೈ, ಕೋಕಿಲ ನಂದ, ತೀರ್ಥಕುಮಾರ್, ಗಂಗಾಧರ ಗೌಡ, ಅಜಿತ್ ಕುಮಾರ್ ಬಂಧಿತರು.
ಗುರುವಾರ ಕೊಂಬಾರು ಗ್ರಾಮದ ಅರಣ್ಯ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿ, ಕಾಡಾನೆಯನ್ನು ಸೆರೆ ಹಿಡಿಯಲಾಗಿತ್ತು. ರಾತ್ರಿ 9 ಗಂಟೆ ವೇಳೆಗೆ ಕಾಡಾನೆಯನ್ನು ದುಬಾರೆ ಆನೆ ಬಿಡಾರಕ್ಕೆ ಬಿಟ್ಟು ಬರಲು ಮುಂದಾದಾಗ ಸ್ಥಳದಲ್ಲಿದ್ದ ಕೆಲವರು ಸ್ಥಳಕ್ಕೆ ಬಂದು, ಕಾಡಾನೆಯನ್ನು ಕೊಂಡೊಯ್ಯುತ್ತಿದ್ದ ಲಾರಿಯನ್ನು ತಡೆದು ನಿಲ್ಲಿಸಿ, ಹಿಡಿದಿರುವ ಆನೆಯನ್ನು ಇಲ್ಲಿಯೇ ನಿಲ್ಲಿಸಿ, ಇತರ ಕಾಡಾನೆಗಳನ್ನು ಸೆರೆಹಿಡಿದು ಒಟ್ಟಿಗೆ ಎಲ್ಲ ಆನೆಗಳನ್ನು ತೆಗೆದುಕೊಂಡು ಹೋಗಬೇಕು ಎಂದು ಗಲಾಟೆ ಮಾಡಿದ್ದರು.
ಸೆರೆ ಹಿಡಿದ ಆನೆಯನ್ನು ಹೆಚ್ಚು ಹೊತ್ತು ಲಾರಿಯಲ್ಲಿ ನಿಲ್ಲಿಸಲು ಆಗುವುದಿಲ್ಲ. ಮೊದಲು ಸೆರೆಹಿಡಿದ ಆನೆಯನ್ನು ಬಿಟ್ಟು ಬಂದು ಉಳಿದ ಕಾಡಾನೆಗಳನ್ನು ಸೆರೆಹಿಡಿಯುವುದಾಗಿ ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದರೂ ಕೇಳದ ಆರೋಪಿಗಳು, ಅರಣ್ಯ ಇಲಾಖೆ ಅಧಿಕಾರಿಗಳ ಜೊತೆ ವಾಗ್ವಾದ ನಡೆಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಬಂದು ತಿಳಿವಳಿಕೆ ಹೇಳಲು ಯತ್ನಿಸಿದರೂ, ಕೇಳದೆ ಆರೋಪಿಗಳು, ಕರ್ತವ್ಯದಲ್ಲಿದ್ದ ಪೊಲೀಸರು ಮತ್ತು ಅರಣ್ಯ ಸಿಬ್ಬಂದಿ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ. ಕಲ್ಲು ತೂರಾಟದಿಂದ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸರಿಗೆ ಗಾಯಗಳಾಗಿವೆ. ಆರೋಪಿಗಳು ಸ್ಥಳದಲ್ಲಿ ನಿಲ್ಲಿಸಿದ್ದ ಅರಣ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆ ವಾಹನಗಳ ಮೇಲೂ ಕಲ್ಲು ತೂರಾಟ ಮಾಡಿ ವಾಹನಗಳನ್ನು ಜಖಂ ಮಾಡಿದ್ದಾರೆ ಎಂದು ಕಡಬ ಉಪ ವಲಯ ಅರಣ್ಯ ಅಧಿಕಾರಿ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ಜೀವ ಬೆದರಿಕೆ ಸೇರಿ ವಿವಿಧ ಸೆಕ್ಷನ್ ಗಳಡಿ ಕೇಸು ದಾಖಲಿಸಿದ್ದು ಏಳು ಮಂದಿಯನ್ನು ಬಂಧಿಸಿದ್ದಾರೆ.
Discover more from Coastal Times Kannada
Subscribe to get the latest posts sent to your email.








Discussion about this post