ಮೂಡಬಿದ್ರೆ, ಡಿ 24 : ಹಾಸ್ಟೆಲ್ನಲ್ಲಿ ನೇಣು ಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆಯಲ್ಲಿ ನಡೆದಿದೆ. ದ್ವಿತೀಯ ಪಿಯುಸಿ ವಿದ್ಯಾರ್ಥಿ ಮನೋಜ್ (18) ಆತ್ಮಹತ್ಯೆ ಮಾಡಿಕೊಂಡವನು.
ಆಳ್ವಾಸ್ ಸಂಸ್ಥೆ ಹಾಸ್ಟೆಲ್ನ ಬಾತ್ ರೂಂನಲ್ಲಿ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಗದಗ ಜಿಲ್ಲೆ ಮುಂಡರಗಿ ತಾಲೂಕಿನ ತರ್ಚಿಹಾಳದ ಮಲ್ಲಪ್ಪ ಎಂಬುವವರ ಮಗ ಮನೋಜ್ ಮೂಡಬಿದ್ರೆಯಲ್ಲಿ ವ್ಯಾಸಂಗ ಮಾಡುತ್ತಿದ್ದ. ವಿಷಯ ತಿಳಿಯುತ್ತಿದ್ದಂತೆ ಹಾಸ್ಟೆಲ್ಗೆ ಪೋಷಕರು ದೌಡಾಯಿಸಿದ್ದು, ಘಟನಾ ಸ್ಥಳಕ್ಕೆ ಬರುವವರೆಗೂ ಮೃತದೇಹವನ್ನು ಹೊರ ತೆಗೆಯದಂತೆ ಪಟ್ಟು ಹಿಡಿದರು. ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಮನೋಜ್ ಪೋಷಕರು ಸೂಕ್ತ ತನಿಖೆ ನಡೆಸುವಂತೆ ಮೂಡಬಿದ್ರೆ ಪೊಲೀಸರಿಗೆ ಮನವಿ ಮಾಡಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಸಂಬಂಧ ತನಿಖೆಯನ್ನು ಮುಂದುವರಿಸಿದ್ದಾರೆ.
Discover more from Coastal Times Kannada
Subscribe to get the latest posts sent to your email.
Discussion about this post