ವಿಜಯಪುರ, ಜ.26: ಧ್ವಜಾರೋಹಣ ವೇಳೆ ವ್ಯಕ್ತಿಯೋರ್ವ ಗಾಳಿಯಲ್ಲಿ ಗುಂಡು ಹಾರಿಸಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಹಿರೇರೂಗಿ ಗ್ರಾಮದಲ್ಲಿ ನಡೆದಿದೆ. ಕನ್ನಡಪರ ಸಂಘಟನೆ ಮುಖಂಡ ಮಲ್ಲು ಗಿನ್ನಿ ಎಂಬಾತ ಗುಂಡು ಹಾರಿಸಿದ್ದು ವೇದಿಕೆಯಲ್ಲಿದ್ದ ಗ್ರಾ.ಪಂ.ಅಧ್ಯಕ್ಷೆ ಸೋಮವ್ವಗೆ ಗುಂಡು ತಾಕಿದೆ. ಗಾಯಾಳು ಸೋಮವ್ವಗೆ ವಿಜಯಪುರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು ಯಾವ ಕಾರಣಕ್ಕೆ ಫೈರಿಂಗ್ ಮಾಡಲಾಗಿದೆ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.
75ನೇ ಗಣರಾಜ್ಯೋತ್ಸವ ಹಿನ್ನೆಲೆ ಇಂದು ಗ್ರಾಮ ಪಂಚಾಯತಿಯಲ್ಲಿ ಧ್ವಜಾರೋಹಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಧ್ವಜಾರೋಹಣ ಸಂದರ್ಭದಲ್ಲಿ ಪಂಚಾಯತಿ ಎದುರಿಗೆ ಕನ್ನಡಪರ ಸಂಘಟನೆ ಮುಖಂಡ ಮಲ್ಲು ಗಿನ್ನಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾನೆ. ಈ ವೇಳೆ ಗುಂಡು ಗ್ರಾಮ ಪಂಚಾಯತಿ ಅಧ್ಯಕ್ಷೆ ಸೋಮವ್ವ ಅವರ ತೊಡೆಗೆ ತಾಗಿದೆ. ತಕ್ಷಣವೇ ನಗರದ ಖಾಸಗಿ ಆಸ್ಪತ್ರೆಗೆ ಸೋಮವ್ವ ಅವರನ್ನು ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಥಳಕ್ಕೆ ಇಂಡಿ ಗ್ರಾಮೀಣ ಪೊಲೀಸರು ದೌಡಾಯಿಸಿದ್ದು ತನಿಖೆ ನಡೆಸುತ್ತಿದ್ದಾರೆ.
ಇನ್ನು ಪೊಲೀಸರು ಸ್ಥಳಕ್ಕೆ ಬರುತ್ತಿದ್ದಂತೆ ಆರೋಪಿ ಎಸ್ಕೇಪ್ ಆಗಿದ್ದಾನೆ. ಗಣರಾಜ್ಯೋತ್ಸವ ವೇಳೆ ಗುಂಡು ಹಾರಿಸಲು ಅವಕಾಶವಿಲ್ಲ. ಆದರೆ ಗುಂಡು ಹಾರಿಸಲಾಗಿದ್ದು ಅವಘಡ ಸಂಭವಿಸಿದೆ. ಈ ಕುರಿತು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿ ಯಾವ ಉದ್ದೇಶಕ್ಕೆ ಹೀಗೆ ಮಾಡಿದ್ದಾನೆ ಎನ್ನುವ ಕುರಿತು ಮಾಹಿತಿ ಕಲೆಹಾಕಲಾಗುತ್ತಿದೆ. ಆತನ ಬಂಧನಕ್ಕೆ ಬಲೆ ಬೀಸಲಾಗಿದೆ. ಸುದ್ದಿ ತಿಳಿಯುತ್ತಲೇ ಇಂಡಿ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಗುಂಡು ಹಾರಿಸಿದ ಪ್ರಕರಣದ ಕುರಿತು ವಿಚಾರಣೆ ನಡೆಸಿದ್ದಾರೆ.
Discussion about this post