ಮಂಗಳೂರು, ಜೂ.26: ದ.ಕ ಮತ್ತು ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸರಗಳ್ಳತನ ಮತ್ತು ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಇಬ್ಬರು ಕುಖ್ಯಾತ ಆರೋಪಿಗಳನ್ನು ಸುರತ್ಕಲ್ ಪೊಲೀಸರು ನಡೆಸಿದ ಕಾರ್ಯಾಚರಣೆ ಯಲ್ಲಿ ಬಂಧಿಸಿದ್ದಾರೆ.
ಬೆಳ್ಳಂಬೆಳಗ್ಗೆ ಮನೆಯಂಗಳದ ಬಾವಿಯಿಂದ ನೀರು ಸೇದುತ್ತಿದ್ದ ವೃದ್ಧ ಮಹಿಳೆಯ ಕುತ್ತಿಗೆಯಿಂದ ಚಿನ್ನದ ಸರ ಕಸಿದು ಇಬ್ಬರು ಪರಾರಿಯಾಗಿದ್ದರು. ಜೂನ್ 2ರಂದು ಸುರತ್ಕಲ್ ಠಾಣೆ ವ್ಯಾಪ್ತಿಯ ತಡಂಬೈಲಿನಲ್ಲಿ ನಡೆದ ಈ ಪ್ರಕರಣದ ಬೆನ್ನು ಹತ್ತಿದ ಪೊಲೀಸರು ಇಬ್ಬರು ಕುಖ್ಯಾತ ಸರಕಳ್ಳರನ್ನು ಸೆರೆಹಿಡಿದಿದ್ದಾರೆ. ಮೂಲತಃ ಸುರತ್ಕಲ್ ಕಾಟಿಪಳ್ಳ ನಿವಾಸಿ, ತೊಕ್ಕೊಟ್ಟಿನ ಚೆಂಬುಗುಡ್ಡೆ, ಬಂಟ್ವಾಳದ ಕಲ್ಲಡ್ಕದಲ್ಲಿ ವಾಸ ಮಾಡಿಕೊಂಡಿದ್ದ ಹಬೀಬ್ ಹಸನ್ ಅಲಿಯಾಸ್ ಚೆಂಬುಗುಡ್ಡೆ ಹಬೀಬ್(42) ಮತ್ತು ಉಳ್ಳಾಲದ ಕೋಡಿ ನಿವಾಸಿ ಮಹಮ್ಮದ್ ಫೈಜಲ್ (35) ಬಂಧಿತರು.

ಬಂಧಿತರಿಂದ 12,48,550 ರೂ.ಮೌಲ್ಯದ ಚಿನ್ನಾಭರಣ ಮತ್ತು 1,34,000 ರೂ.ಮೌಲ್ಯದ ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮಂಗಳೂರು ನಗರ ಪೋಲಿಸ್ ಕಮೀಶನರ್ ಕುಲದೀಪ್ ಕುಮಾರ್ ಆರ್ ಜೈನ್ ಸೋಮವಾರ ತಿಳಿಸಿದ್ದಾರೆ.

ಆರೋಪಿಗಳ ಬಂಧನೊಂದಿಗೆ ಎರಡು ಜಿಲ್ಲೆಗಳಲ್ಲಿ ನಡೆದಿರುವ ಸರಗಳ್ಳತನ ಮತ್ತು ಮತ್ತು ದ್ವಿಚಕ್ರ ವಾಹನಗಳ ಕಳ್ಳತನ ಸೇರಿದಂತೆ 13 ಪ್ರಕರಣಗಳು ಪತ್ತೆಯಾಗಿವೆ. ಆರೋಪಿ ಹಬೀಬ್ ಹಸನ್ ಎಂಬಾತನು ಈ ಹಿಂದೆ ಎರಡೂ ಜಿಲ್ಲೆಗಳ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ 35ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಆರೋಪಿಯಾಗಿದ್ದ. ಇನ್ನೊಬ್ಬ ಆರೋಪಿ ಮಹಮ್ಮದ್ ಫೈಜಲ್ 15 ಪ್ರಕರಣಗಳಲ್ಲಿ ಆರೋಪ ಎದುರಿಸುತ್ತಿದ್ದ. ಈತ ಪ್ರಕರಣವೊಂದರಲ್ಲಿ ಜೈಲು ಸಜೆ ಅನುಭವಿಸಿ ಎಪ್ರಿಲ್ ನಲ್ಲಿ ಜೈಲಿನಿಂದ ಹೊರಬಂದಿದ್ದ ಸದ್ಯಕ್ಕೆ ಸುರತ್ಕಲ್ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ನೇತೃತ್ವದ ತನಿಖೆಯಲ್ಲಿ ಒಂಬತ್ತು ಕಡೆಯ ಸರ ಕಳ್ಳತನ ಮತ್ತು ನಾಲ್ಕು ದ್ವಿಚಕ್ರ ವಾಹನ ಕಳ್ಳತನ ಮಾಡಿದ್ದನ್ನು ಪತ್ತೆ ಮಾಡಲಾಗಿದೆ ಎಂದು ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದಾರೆ.
ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
Discover more from Coastal Times Kannada
Subscribe to get the latest posts sent to your email.







Discussion about this post