ಮಂಗಳೂರು, ಮಾ.27: ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಬೆಂಗಳೂರು ಮೂಲಕ ನಗರಕ್ಕೆ ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು ಸಾಗಾಟ ಮಾಡಿ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪತ್ತೆ ಹಚ್ಚಿದ ಮಂಗಳೂರು ಸಿಸಿಬಿ ಪೊಲೀಸರು 6.325 ಕೆಜಿ ಗಾಂಜಾವನ್ನು ಬುಧವಾರ ವಶಪಡಿಸಿಕೊಂಡಿದ್ದಾರೆ.
ಆರೋಪಿಯನ್ನು ವಾಮಂಜೂರು ಸಮೀಪದ ಕುಡುಪು ಪೆದಮಲೆಯ ನಿಶಾಂತ್ ಶೆಟ್ಟಿ (36)ಎಂದು ಗುರುತಿಸಲಾಗಿದೆ. ಈತ ಸಣ್ಣ ಸಣ್ಣ ಪ್ಯಾಕೆಟ್ನಲ್ಲಿ ರೈಲಿನಲ್ಲಿ ಸಾಗಾಟ ಮಾಡಿಕೊಂಡು ಬಂದು ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಪಡೆದ ಸಿಸಿಬಿ ಪೊಲೀಸರು ತೊಕ್ಕೊಟ್ಟು ಒಳಪೇಟೆಯ ಕೃಷ್ಣನಗರ ಪರಿಸರದಲ್ಲಿ ಗೂಡ್ಸ್ ಟೆಂಪೋವೊಂದರಲ್ಲಿ ಗಾಂಜಾ ಸಾಗಿಸಿ ಮಾರಾಟ ಮಾಡುತ್ತಿದ್ದಾಗ ದಾಳಿ ನಡೆಸಿ ಬಂಧಿಸಿದ್ದಾರೆ.
ಆರೋಪಿ ಸಾಗಿಸುತ್ತಿದ್ದ 1,50,000 ರೂ. ಮೌಲ್ಯದ 6 ಕೆಜಿ 325 ಗ್ರಾಂ ಗಾಂಜಾವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಸಿಸಿಬಿ ಘಟಕದ ಎಸಿಪಿ ಗೀತಾ ಕುಲಕರ್ಣಿ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ಎಚ್ ಎಂ, ಪಿಎಸ್ಐ ಬಸವರಾಜಪ್ಪ ಮತ್ತು ಸಿಸಿಬಿ ಸಿಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಆರೋಪಿಯ ವಿರುದ್ಧ ಈ ಹಿಂದೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ, ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಅಕ್ರಮ ಪಿಸ್ತೂಲ್ ಹೊಂದಿದ ಪ್ರಕರಣ, ಕಳವು ಪ್ರಕರಣ, ಬರ್ಕೆ ಪೊಲೀಸ್ ಠಾಣೆಯಲ್ಲಿ ಸರಕಳ್ಳತನ ಪ್ರಕರಣ, ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ, ವಿಟ್ಲ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ ಮತ್ತು ಕಳ್ಳತನ ಪ್ರಕರಣ, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಗಾಂಜಾ ಮಾರಾಟ ಪ್ರಕರಣ ಹೀಗೆ ಒಟ್ಟು 10ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ.
Discussion about this post