ಉಡುಪಿ: ಉಡುಪಿಯ ಪ್ಯಾರಾಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯೊಬ್ಬರ ವಿಡಿಯೋವನ್ನು ಆಕೆಯ ಸಹ ವಿದ್ಯಾರ್ಥಿಗಳು ರೆಕಾರ್ಡ್ ಮಾಡಿದ್ದಾರೆ ಎಂಬ ಆರೋಪದ ಬಗ್ಗೆ ಪರಿಶೀಲಿಸಲು ನಾನು ಉಡುಪಿಗೆ ತೆರಳುತ್ತಿದ್ದೇನೆ ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಅವರು ಬುಧವಾರ ಉಡುಪಿಗೆ ಆಗಮಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಕಾಲೇಜಿನ ಮೂವರು ವಿದ್ಯಾರ್ಥಿನಿಯರಾದ ಶಬ್ನಾಜ್, ಅಲ್ಫಿಯಾ ಮತ್ತು ಅಲೀಮಾ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಈ ಘಟನೆಯು “ಅತ್ಯಂತ ದುಃಖಕರ” ಎಂದಿರುವ ಖುಷ್ಬೂ, ಉಡುಪಿ ಕಾಲೇಜಿನ ಈ ಪ್ರಕರಣ ಇದೀಗ ರಾಜಕೀಯ ತಿರುವು ಪಡೆದುಕೊಂಡಿದ್ದು, ಹಿಂದೂ ಹುಡುಗಿಯರ ವಿಡಿಯೋ ಚಿತ್ರೀಕರಣದಲ್ಲಿ ಭಾಗಿಯಾಗಿರುವ ಮೂವರು ಮುಸ್ಲಿಂ ವಿದ್ಯಾರ್ಥಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಭಾರತೀಯ ಜನತಾ ಪಕ್ಷ ಗುರುವಾರ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ.
ಪ್ರಕರಣಕ್ಕೆ ಸಂಬಂಧಿಸಿದ ಒಂದುವರೆ ಗಂಟೆಗಳ ಕಾಲ ಎಸ್ ಪಿ ಹಾಗೂ ಡಿಸಿ ಜೊತೆ ಮಾತುಕತೆ ನಡೆಸಿದ ಬಳಿಕ ಅವರು ಇಂದು ರಾತ್ರಿ ವೇಳೆ ಮಾಧ್ಯಮದವರಿಗೆ ಈ ರೀತಿ ಪ್ರತಿಕ್ರಿಯೆ ನೀಡಿದರು. ಮಹಿಳಾ ಆಯೋಗ ಪ್ರತಿಭಟನೆ ಮಾಡಲು ಇರುವ ಸಂಸ್ಥೆ ಅಲ್ಲ. ಮಹಿಳಾ ಆಯೋಗ ಈ ಪ್ರಕರಣಕ್ಕೆ ಯಾವುದೇ ಕೋಮು ಬಣ್ಣ ಬಳಿಯಲು ಬಂದಿಲ್ಲ. ನಮ್ಮದು ಮಹಿಳೆಯರ ರಕ್ಷಣೆಗೆ ಇರುವ ಸಂಸ್ಥೆ ಎಂದ ಅವರು ಯಾವುದೇ ಒಂದು ನಿರ್ದಿಷ್ಟ ಕೋಮುವಿನ ಮಹಿಳೆಯ ರಕ್ಷಣೆ ನಾವು ಬಂದಿಲ್ಲ. ದಯವಿಟ್ಟು ಈ ಪ್ರಕರಣಕ್ಕೆ ಯಾವುದೇ ಕೋಮು ಬಣ್ಣ ಬಳಿಯಬೇಡಿ. ನಮಗೆ ಯಾವುದೇ ಸಾಕ್ಷ್ಯ ಲಭ್ಯವಾಗಿಲ್ಲ. ಯಾವುದೇ ಫೋಟೋ ಅಥವಾ ವಿಡಿಯೋ ಲಭ್ಯವಿಲ್ಲ. ವಿಜ್ಞಾನ ಪ್ರಯೋಗಾಲಯದ ವರದಿ ಬಂದ ನಂತರ ಸ್ಪಷ್ಟತೆ ಸಿಗಬೇಕು ಎಂದರು.
ಮಹಿಳಾ ಆಯೋಗ ಮತ್ತು ಪೊಲೀಸರು ತಮ್ಮ ಕರ್ತವ್ಯ ಮಾಡುತ್ತಿದ್ದಾರೆ. ಪ್ರಕರಣದಲ್ಲಿ ಎಳೆಯ ಮನಸ್ಸುಗಳು ಒಳಗೊಂಡಿವೆ. ಸರಿಯಾದ ಹಾದಿಯಲ್ಲಿ ಪ್ರಕರಣದ ತನಿಖೆ ಆಗಬೇಕು. ತನಿಖೆಗೆ ಮೊದಲೇ ಯಾವುದೇ ತೀರ್ಮಾನಕ್ಕೆ ಬರುವುದು ಬೇಡ ಎಂದರು.
ಎಫ್ಐಆರ್ ವಿಳಂಬ ವಿಚಾರ ಬಗ್ಗೆ ಪ್ರತಿಕ್ರಿಸಿದ ಅವರು, ಕಾಲೇಜು ಆಡಳಿತ ಮಂಡಳಿ ನಿನ್ನೆ ಈ ಬಗ್ಗೆ ಪತ್ರಿಕಾಗೋಷ್ಠಿ ಮಾಡಿದೆ. ಯಾವುದೇ ದೂರು ಬಾರದ ಕಾರಣ ಪೊಲೀಸರು ದೂರು ದಾಖಲಿಸಿಲ್ಲ. ಸಂತ್ರಸ್ತೆ ದೂರು ಕೊಟ್ಟಿಲ್ಲ. ತಾನು ದೂರು ನೀಡಲು ಬಯಸುವುದಿಲ್ಲ ಎಂದು ಸಂತ್ರಸ್ತೆ ಪತ್ರದ ಮೂಲಕ ಹೇಳಿದ್ದಾರೆ. ಕಾಲೇಜು ಆಡಳಿತ ಮಂಡಳಿಯ ಪತ್ರಿಕಾಗೋಷ್ಠಿಯ ನಂತರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದರು.
Discussion about this post