ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಕೆಲವು ದಿನಗಳಿಂದ ನಡೆಯುತ್ತಿದ್ದ ಸಿಎಂ ಕುರ್ಚಿ ಕದನಕ್ಕೆ ತೆರೆ ಬಿದ್ದಿದ್ದು, ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದಾರೆ. ಇಂದು ಮಧ್ಯಾಹ್ನ ಲೋಕಭವನಕ್ಕೆ ಆಗಮಿಸಿದ ಅವರು ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪ್ರಭು ಶಂಕರ್ ಅವರಿಗೆ ಸಲ್ಲಿಸಿದರು. ಈ ಮೂಲಕ ಕಳೆದ ಮೂರು ವರ್ಷಗಳ ಅವರ ಆಡಳಿತ ಅಂತ್ಯಗೊಂಡಿತು.
ರಾಜ್ಯಪಾಲರು ಇಂದೋರ್ ಗೆ ತೆರಳಿರುವ ಕಾರಣ ಸಿದ್ದರಾಮಯ್ಯ ಅವರು ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಹಸ್ತಾಂತರಿಸಿದರು. ಸದ್ಯಕ್ಕೆ ರಾಜೀನಾಮೆ ಪತ್ರವನ್ನು ಕಾರ್ಯದರ್ಶಿಗಳು ಸ್ವೀಕರಿಸಿದ್ದರೂ, ಸಂವಿಧಾನದ ನಿಯಮಾವಳಿಗಳ ಪ್ರಕಾರ ರಾಜ್ಯಪಾಲರು ಖುದ್ದಾಗಿ ಸಹಿ ಮಾಡಿದ ಬಳಿಕವೇ ರಾಜೀನಾಮೆ ಅಧಿಕೃತವಾಗಿ ಅಂಗೀಕಾರವಾಗಲಿದೆ.
ಮೂಲಗಳ ಪ್ರಕಾರ ರಾಜ್ಯಪಾಲರು ಇಂದು ರಾತ್ರಿ 7:30ಕ್ಕೆ ಬೆಂಗಳೂರಿಗೆ ಮರಳುವ ಸಾಧ್ಯತೆಯಿದೆ. ಹೀಗಾಗಿ ರಾಜ್ಯಪಾಲರು ಮರಳಿದ ಬಳಿಕವಷ್ಟೇ ರಾಜೀನಾಮೆ ಅಂಗೀಕಾರದ ಔಪಚಾರಿಕ ಪ್ರಕ್ರಿಯೆಗಳು ಪೂರ್ಣಗೊಳ್ಳಲಿವೆ.

ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡುತ್ತಲೇ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ, ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾಗಿ ಹೇಳಿದರು. ಆದರೆ ರಾಜ್ಯಪಾಲರು ಬೆಂಗಳೂರಿನಲ್ಲಿ ಇಲ್ಲದ ಕಾರಣ, ರಾಜೀನಾಮೆ ಪತ್ರವನ್ನು ಅವರ ಕಚೇರಿಯ ಕಾರ್ಯದರ್ಶಿಗೆ ಹಸ್ತಾಂತರಿಸಲಾಗಿದೆ ಎಂದು ತಿಳಿಸಿದರು. ರಾಜೀನಾಮೆ ನೀಡಿದ ನಂತರ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ತಾವು ಯಾವಾಗಲೂ ಹೈಕಮಾಂಡ್ ತೀರ್ಮಾನಕ್ಕೆ ಬದ್ಧರಾಗಿದ್ದು, ನಾಯಕರು ಸೂಚಿಸಿದಂತೆ ಗುರುವಾರವೇ ರಾಜೀನಾಮೆ ಸಲ್ಲಿಸಿರುವುದಾಗಿ ಸ್ಪಷ್ಟಪಡಿಸಿದರು.
‘ಹೈಕಮಾಂಡ್ ಯಾವಾಗ ಸೂಚಿಸುತ್ತಾರೋ ಆಗ ರಾಜಿನಾಮೆ ನೀಡುತ್ತೇನೆ ಎಂದು ಹೇಳಿದ್ದೆ. ಅದರ ಪ್ರಕಾರ ಮೊನ್ನೆ ಹೈಕಮಾಂಡ್ ರಾಜಿನಾಮೆ ನೀಡಿ ಎಂದು ಹೇಳಿದರು. ಹೀಗಾಗಿ ನಾನು ನಾಡಿದ್ದು ರಾಜಿನಾಮೆ ನೀಡುತ್ತೇನೆ ಎಂದು ಹೇಳಿದ್ದೆ. ಇಂದು ನನ್ನ ರಾಜಿನಾಮೆ ನೀಡಿದ್ದೇನೆ. ರಾಜ್ಯಪಾಲರು ನನ್ನ ರಾಜಿನಾಮೆ ಪತ್ರವನ್ನು ಅವರು ಆಗಮಿಸಿದ ಬಳಿಕ ಅಂಗೀಕಾರ ಮಾಡುತ್ತಾರೆ ಎಂಬ ಸಂಪೂರ್ಣ ವಿಶ್ವಾಸವಿದೆ. ಅಲ್ಲದೆ ಸಂವಿಧಾನದ ಪ್ರಕಾರ ಮಾಡಲೇಬೇಕು ಕೂಡ. ಒಂದು ಸಾರಿ ಮುಖ್ಯಮಂತ್ರಿಗಳು ರಾಜಿನಾಮೆ ಕೊಟ್ಟ ಮೇಲೆ ಅಂಗೀಕಾರ ಮಾಡಿ, ಮುಂದಿನ ಮುಖ್ಯಮಂತ್ರಿಗಳಿಗೆ ಅವಕಾಶ ಮಾಡಿಕೊಡುವುದು ಅವರ ಕರ್ತವ್ಯ ಎಂದರು.
Discover more from Coastal Times Kannada
Subscribe to get the latest posts sent to your email.







Discussion about this post