ರಾಜ್ಗಢ: ಮಧ್ಯಪ್ರದೇಶದ ರಾಜ್ಗಢದಲ್ಲಿ ಶುಕ್ರವಾರ ಮುಂಜಾನೆ ಭೀಕರ ಅಪಘಾತ ಸಂಭವಿಸಿದ್ದು, ಆರೋಪಿಯ ಬಂಧನಕ್ಕೆ ತೆರಳಿದ್ದ ಬೆಂಗಳೂರಿನ ಸೈಬರ್ ಕ್ರೈಂ ಪೊಲೀಸ್ ಇನ್ಸ್ಪೆಕ್ಟರ್ ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ.
ಬೆಂಗಳೂರಿನ ಆಗ್ನೇಯ ಸೈಬರ್ ಕ್ರೈಂ ಠಾಣೆಯ ಇನ್ಸ್ಪೆಕ್ಟರ್ ರವಿ ಕೆ.ಬಿ. ಮೃತಪಟ್ಟವರು. ಅಲ್ಲದೇ, ಅವರ ಜೊತೆಗಿದ್ದ ಪೊಲೀಸ್ ಸಿಬ್ಬಂದಿಯಾದ ವಿಶ್ವನಾಥ್ ಮತ್ತು ರಮೇಶ್ ಗಾಯಗೊಂಡಿದ್ದಾರೆ.
ವೇಗವಾಗಿ ಸಾಗುತ್ತಿದ್ದ ಬಸ್ ನಿಯಂತ್ರಣ ತಪ್ಪಿ ರಾಜ್ಗಢದ ಬಿಯೋರಾದ ಭೋಪಾಲ್ ಬೈಪಾಸ್ ಸೇತುವೆಯ ಗೋಡೆಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಮೇಲಿನ ಡೆಕ್ನ ಸೀಟ್ಗಳಲ್ಲಿ ಮಲಗಿದ್ದ ಪ್ರಯಾಣಿಕರು ಕಿಟಕಿಗಳಿಂದ ಹೊರಗೆ ಎಸೆಯಲ್ಪಟ್ಟು ಸೇತುವೆಯಿಂದ ಕೆಳಗೆ ಬಿದ್ದಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ. ಅಲ್ಲದೇ, ಘಟನೆಯಲ್ಲಿ 11 ಪ್ರಯಾಣಿಕರನ್ನು ಮಧ್ಯಪ್ರದೇಶದ ಬಿಯೋರಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ. ಪ್ರಯಾಣಿಕರನ್ನು ಸ್ಥಳೀಯರು ಮತ್ತು ಪೊಲೀಸರ ಸಹಾಯದಿಂದ ರಕ್ಷಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಆರೋಪಿಯ ಬಂಧನಕ್ಕೆ ಹೊರಟಿದ್ದ ಇನ್ಸ್ಪೆಕ್ಟರ್: ಘಟನೆ ಬಗ್ಗೆ ಮಾಹಿತಿ ನೀಡಿದ ರಾಜ್ಗಢ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಟೋಲಾನಿ, “ಪ್ರಾಥಮಿಕ ತನಿಖೆ ಪ್ರಕಾರ ಅತಿವೇಗವೇ ಘಟನೆಗೆ ಕಾರಣ ಎಂದು ತೋರುತ್ತದೆ. ಬಸ್ ಸೇತುವೆಯ ಗೋಡೆಗೆ ಡಿಕ್ಕಿ ಹೊಡೆದ ಸ್ಥಳದಲ್ಲಿ ತಿರುವು ಇದೆ. ಘಟನೆಯಲ್ಲಿ ಬೆಂಗಳೂರು ಸೈಬರ್ ಸೆಲ್ನಲ್ಲಿ ಸಬ್ – ಇನ್ಸ್ಪೆಕ್ಟರ್ ರವಿ ಕೆ.ಬಿ. ಅವರೂ ಸಹ ಪ್ರಾಣ ಕಳೆದುಕೊಂಡಿದ್ದಾರೆ. ಅವರು ಪ್ರಕರಣವೊಂದರ ಆರೋಪಿಯನ್ನು ಬಂಧಿಸಲು ಇಲ್ಲಿಗೆ ಬಂದಿದ್ದರು. ರವಿ ಅವರ ತಂಡದ ಸಿಬ್ಬಂದಿಯಾದ ವಿಶ್ವನಾಥ್ ಮತ್ತು ರಮೇಶ್ ಎಂಬವರೂ ಗಾಯಗೊಂಡಿದ್ದಾರೆ. ಘಟನೆ ಬಗ್ಗೆ ತನಿಖೆ ನಡೆಯುತ್ತಿದೆ” ಎಂದು ತಿಳಿಸಿದ್ದಾರೆ.
ಘಟನೆಯ ನಂತರ ಸಚಿವ ನಾರಾಯಣ್ ಸಿಂಗ್ ಪನ್ವಾರ್ ಕೂಡ ಸ್ಥಳಕ್ಕೆ ಭೇಟಿ ನೀಡಿದರು. “ಸೇತುವೆಯ ತಿರುವಿಗೆ ಸಂಬಂಧಿಸಿದ ಸಮಸ್ಯೆ ಬಗ್ಗೆ ನಾವು ತನಿಖೆ ಮಾಡುತ್ತೇವೆ. ಸ್ಪೀಡ್ ಬ್ರೇಕರ್ಗಳ ಅಳವಡಿಕೆಯ ಬಗ್ಗೆ ಚರ್ಚಿಸುತ್ತೇವೆ. ಈ ಬಗ್ಗೆ ತನಿಖೆ ನಡೆಸಲಾಗುವುದು” ಎಂದು ಸಚಿವರು ಹೇಳಿದ್ದಾರೆ.
Discover more from Coastal Times Kannada
Subscribe to get the latest posts sent to your email.







Discussion about this post