ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಪರಿಷತ್ ಘಟಕದ ಉದ್ಘಾಟನೆಗೆ ಅತಿಥಿಯಾಗಿ ಕಲ್ಕಡ್ಕ ಪ್ರಭಾಕರ ಭಟ್ ಅವರನ್ನು ಅತಿಥಿ ಆಹ್ವಾನಿಸಿರುವುದನ್ನು ವಿರೋಧಿಸಿದ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ( ಸಿಎಫ್ಐ) ಕಾರ್ಯಕರ್ತರು ವಿಶ್ವವಿದ್ಯಾಲಯದ ಮುಖ್ಯ ದ್ವಾರದಲ್ಲಿ ಪ್ರತಿಭಟನೆ ನಡೆಸಿದರು.
‘ಪ್ರಭಾಕರ ಭಟ್ ಗೋ ಬ್ಯಾಕ್ ‘ ಎಂದು ಘೋಷಣೆ ಕೂಗಿದರು. ಪ್ರತಿಭಟನೆಯ ಹಿನ್ನಲೆಯಲ್ಲಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದರು. ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ವಿವಿ ಪ್ರವೇಶ ದ್ವಾರದಲ್ಲೇ ತಡೆದು ನಿಲ್ಲಿಸಲಾಯಿತು.
ವಿಶ್ವವಿದ್ಯಾನಿಲಯದ ಅಧಿಕೃತ ಕಾರ್ಯಕ್ರಮಕ್ಕೆ ಇಂತಹ ದ್ವೇಷ ಭಾಷಣಗಾರರನ್ನು ಆಹ್ವಾನಿಸುವ ಮೂಲಕ ಶೈಕ್ಷಣಿಕ ವಾತಾವರಣ ಹದಗೆಡುವುದರಲ್ಲಿ ಸಂಶಯವಿಲ್ಲ, ಈಗಾಗಲೇ ಕಲ್ಲಡ್ಕ ಪ್ರಭಾಕರ್ ಭಟ್ ಜಿಲ್ಲಾದ್ಯಂತ ಕೋಮುದ್ವೇಷದ ಭಾಷಣಗಳನ್ನು ಮಾಡುತ್ತಾ ಸಮಾಜದ ಶಾಂತಿ ಸುವ್ಯವಸ್ಥೆಗೆ ಧಕ್ಕೆ ತಂದಿರುತ್ತಾರೆ. ವಿವಿಧ ಠಾಣೆಗಳಲ್ಲಿ ಅವರ ವಿರುದ್ಧ ದೂರು ಕೂಡ ದಾಖಲಾಗಿರುತ್ತದೆ. ಇಂತಹ ವ್ಯಕ್ತಿಗಳನ್ನು ವಿಶ್ವವಿದ್ಯಾನಿಯದ ಅಧಿಕೃತ ಕಾರ್ಯಕ್ರಮಕ್ಕೆ ಆಹ್ವಾನಿಸಿ ಭಾಷಣ ನೀಡುವುದು ದುರದೃಷ್ಟಕರ. ಆದ್ದರಿಂದ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಪರಿಷತ್ ಉದ್ಘಾಟನಾ ಕಾರ್ಯಕ್ರಮಕ್ಕೆ ಅವರನ್ನು ಕೈಬಿಟ್ಟು ವಿಶ್ವವಿದ್ಯಾನಿಲಯದ ಶಾಂತಿ ಸುವ್ಯವಸ್ಥೆಯನ್ನು ಕಾಪಾಡಬೇಕು ಎಂದು ಮಂಗಳೂರು ವಿವಿ ಕುಲಪತಿ ಬಿ.ಎಸ್ ಯಡಪಡಿತ್ತಾಯ ಅವರಿಗೆ ಕ್ಯಾಂಪಸ್ ಫ್ರಂಟ್ ನಿಯೋಗ ಸೋಮವಾರ ಮನವಿ ಸಲ್ಲಿಸಿತ್ತು.
ವಿವಿ ಕ್ಯಾಂಪಸ್ ನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಲಾಗಿದೆ.
ವಿದ್ಯಾರ್ಥಿ ಪರಿಷತ್ ಉದ್ಘಾಟನೆ: ಇನ್ನೊಂದು ಪ್ರವೇಶ ದ್ವಾರದಿಂದ ಬಂದ ಕಲ್ಲಡ್ಕ ಪ್ರಭಾಕರ ಭಟ್ ಅವರು ವಿವಿಯ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಪರಿಷತ್ ಘಟಕವನ್ನು ಉದ್ಘಾಟಿಸಿದರು.
ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಪಿ.ಎಸ್. ಯಡಪಡಿತ್ತಾಯ ಮತ್ತು ವಿವಿ ಪ್ರಮುಖರು ಭಾಗವಹಿಸಿದರು.
Discussion about this post