ಉಡುಪಿ, ಮಾ 30: ಮದುವೆಯಾದ ಒಂದೇ ತಿಂಗಳಿಗೆ ಉದ್ಯಮಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನಲ್ಲಿ ನಡೆದಿದೆ. ಮೂಲತಃ ನೆಲ್ಯಾಡಿ ನಿವಾಸಿಯಾಗಿರುವ ಸುದೀಪ್ ಶೆಟ್ಟಿ ಎಂಬುವರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಳೆದ ತಿಂಗಳು ಮದುವೆಯಾಗಿದ್ದ ವಿವಾಹಿತ ಉದ್ಯಮಿ ಸುದೀಪ್ ಶೆಟ್ಟಿ, ಮಾರ್ಚ್ 17ರಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ, ಕೂಡಲೇ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದ್ರೆ, ಹತ್ತಾರು ದಿನ ಜೀವನ್ಮರಣ ಹೋರಾಟ ನಡೆಸಿ ಕೊನೆಗೆ ಚಿಕಿತ್ಸೆ ಫಲಿಸದೆ ಮಾರ್ಚ್ 29ರಂದು ಕೊನೆಯುಸಿರೆಳೆದಿದ್ದಾರೆ.
ಸುದೀಪ್ ಹಾಗೂ ಸೌಮ್ಯ ಶೆಟ್ಟಿ ರಿಜಿಸ್ಟರ್ ಮ್ಯಾರೇಜ್ ಆಗಿದ್ದರು. ಮೂಲತಃ ಕಾರ್ಕಳ ತಾಲೂಕಿನ ಬಂಗ್ಲೆಗುಡ್ಡೆ ನಿವಾಸಿಯಾಗಿರುವ ಸೌಮ್ಯ ಶೆಟ್ಟಿ, ಜೊತೆ ಸುದೀಪ್ ಕಳೆದ ತಿಂಗಳು ಫೆಬ್ರವರಿ 17ರಂದು ಪುತ್ತೂರು ರಿಜಿಸ್ಟರ್ ಆಫೀಸಿನಲ್ಲಿ ಮದುವೆಯಾಗಿದ್ದರು. ನಾಟಕ ಕಲಾವಿದೆ ಹಾಗೂ ಮೇಕಪ್ ಆರ್ಟಿಸ್ಟ್ ಆಗಿರುವ ಸೌಮ್ಯ ಶೆಟ್ಟಿ ಈ ಹಿಂದೆ ಒಂದು ಮದುವೆಯಾಗಿ ಪತಿಗೆ ಡಿವೋರ್ಸ್ ನೀಡಿ ಸುದೀಪ್ ಜೊತೆ ವಿವಾಹವಾಗಿದ್ದರು. ಆದರೆ, ಸೌಮ್ಯ ಜೊತೆ ವಿವಾಹದ ಬಗ್ಗೆ ಸುದೀಪ್ ಕುಟುಂಬ ಆಕ್ಷೇಪ ವ್ಯಕ್ತಪಡಿಸಿತ್ತು.
ಸೌಮ್ಯ ಶೆಟ್ಟಿ ಜೊತೆ ಮದುವೆಯಾಗಿದ್ದಕ್ಕೆ ಸುದೀಪ್ ಕುಟುಂಬದವರು ವಿರೋಧ ವ್ಯಕ್ತಪಡಿಸಿದ್ದ ಹಿನ್ನೆಲೆ ಒಂದೇ ತಿಂಗಳಲ್ಲಿ ಸಂಬಂಧ ಬಿಗಡಾಯಿಸಿತ್ತು. ಬಳಿಕ ಸುದೀಪ್ ಕಳೆದ ಮಾರ್ಚ್ 17 ರಂದು ಕಡಬ ತಾಲೂಕಿನ ನೆಲ್ಯಾಡಿಯಲ್ಲಿದ್ದ ವೇಳೆ ಅಲ್ಲಿಗೆ ಬಂದಿದ್ದ ಸೌಮ್ಯ ಬೆದರಿಕೆ ಹಾಕಿರುವುದಾಗಿ ಆರೋಪ ಕೇಳಿಬಂದಿದೆ. ಇದಾದ ಬಳಿಕ ಮಾರ್ಚ್ 22 ರಂದು ಸುದೀಪ್ ವಿಷ ಸೇವಿಸಿರುವ ಬಗ್ಗೆ ಸೌಮ್ಯ ಸಂಬಂಧಿಕರು ಮಾಹಿತಿ ನೀಡಿದ್ದರು. ಮಾ.23 ರಂದು ವಿಷ ಸೇವಿಸಿದ ಸುದೀಪ್ನನ್ನು ಸೌಮ್ಯ ನಿಟ್ಟೆಯ ಗಜಾರಿಯ ಆಸ್ಪತ್ರೆಗೆ ಸೇರಿಸಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿಯ ಆದರ್ಶ ಆಸ್ಪತ್ರೆಗೆ ರವಾನಿಸಲಾಗಿತ್ತು. ನಂತರ ಮಾರ್ಚ್ 24ರಂದು ಸುದೀಪ್ ತಂದೆ ಮಂಗಳೂರಿನ ಏನಪೋಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದರು. ಆದರೆ ದುರಾದೃಷ್ಟವಶಾತ್ ಸುದೀಪ್ ಚಿಕಿತ್ಸೆ ಫಲಕಾರಿಯಾಗದೆ ಮಾರ್ಚ್ 29ರಂದು ಸಾವನ್ನಪ್ಪಿದ್ದಾರೆ.
ಮಗ ಸಾವನ್ನಪ್ಪಿದ ಬೆನ್ನಲ್ಲೇ ಸೊಸೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾಳೆ ಎಂದು ಮೃತ ಸುದೀಪ್ ತಂದೆ ದಾಮೋದರ್ ಆರೋಪ ಮಾಡಿದ್ದಾರೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಕಾರ್ಕಳ ನಗರ ಪೊಲೀಸರು, ಮರಣೋತ್ತರ ಪರೀಕ್ಷೆ ವರದಿ ಆಧರಿಸಿ ಮುಂದಿನ ತನಿಖೆ ನಡೆಸುತ್ತೇವೆ ಎಂದು ತಿಳಿಸಿದ್ದಾರೆ.
Discover more from Coastal Times Kannada
Subscribe to get the latest posts sent to your email.







Discussion about this post