ಮಂಗಳೂರು: ಮೊಬೈಲ್ ಫೋನ್ ವಿಚಾರಕ್ಕೆ ಸಂಬಂಧಿಸಿದಂತೆ ಅಣ್ಣ-ತಮ್ಮಂದಿರ ನಡುವೆ ನಡೆದ ಕ್ಷುಲ್ಲಕ ಜಗಳ ವಿಕೋಪಕ್ಕೆ ತಿರುಗಿ, ತಮ್ಮನೇ ಅಣ್ಣನಿಗೆ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಭಾನುವಾರ ರಾತ್ರಿ ನಗರದ ಬಿಜೈ ಕೊಟ್ಟಾರ್ ಕ್ರಾಸ್ ಬಳಿ ನಡೆದಿದೆ.
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಮೂಲದ ಅಡಿವೆಪ್ಪ (40) ಕೊಲೆಯಾದ ವ್ಯಕ್ತಿ. ಕೃತ್ಯ ಎಸಗಿದ ಆರೋಪಿ ತಮ್ಮ ರಾಜು (36) ಎಂಬಾತನನ್ನು ಉರ್ವ ಠಾಣಾ ಪೊಲೀಸರು ಬಂಧಿಸಿದ್ದಾರೆ ಎಂದು ಮಂಗಳೂರು ನಗರ ಪೊಲೀಸ್ ಕಮೀಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.
ಮೂಲತಃ ಬೆಳಗಾವಿಯವರಾದ ಈ ಕುಟುಂಬವು ಕೊಟ್ಟಾರ್ ಕ್ರಾಸ್ ಸಮೀಪದ ಬಾಡಿಗೆ ಮನೆಯಲ್ಲಿ ವಾಸವಾಗಿತ್ತು. ತಾಯಿ ಸಣ್ಣ ಗೂಡಂಗಡಿ ನಡೆಸಿಕೊಂಡು ಜೀವನ ಸಾಗಿಸುತ್ತಿದ್ದರೆ, ಇಬ್ಬರೂ ಸಹೋದರರು ಕೂಲಿ ಕೆಲಸ ಮಾಡುತ್ತಿದ್ದರು. ಇಬ್ಬರಿಗೂ ಮದ್ಯವ್ಯಸನದ ಚಟವಿತ್ತು. ಭಾನುವಾರ ರಾತ್ರಿ ಸುಮಾರು 10:30 ರಿಂದ 11:00 ಗಂಟೆಯ ಅವಧಿಯಲ್ಲಿ ಮೊಬೈಲ್ ವಿಚಾರವಾಗಿ ಇಬ್ಬರ ನಡುವೆ ತೀವ್ರ ಮಾತಿನ ಚಕಮಕಿ ನಡೆದಿದೆ.
ಜಗಳ ತಾರಕಕ್ಕೇರಿದಾಗ ಆಕ್ರೋಶಗೊಂಡ ತಮ್ಮ ರಾಜು, ಚಾಕುವಿನಿಂದ ಅಣ್ಣ ಅಡಿವೆಪ್ಪನಿಗೆ ಇರಿದಿದ್ದಾನೆ. ತಾಯಿ ರಾತ್ರಿ ಅಂಗಡಿ ಮುಚ್ಚಿ ಮನೆಗೆ ಬಂದಾಗ ಅಡಿವೆಪ್ಪ ರಕ್ತದ ಮಡುವಿನಲ್ಲಿ ಬಿದ್ದಿರುವುದು ಬೆಳಕಿಗೆ ಬಂದಿದೆ. ತಕ್ಷಣ ಅವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅಷ್ಟರಲ್ಲಾಗಲೇ ಆತ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.
ಘಟನಾ ಸ್ಥಳಕ್ಕೆ ಉರ್ವ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿ ರಾಜುವನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಮಂಗಳೂರು ನಗರ ಪೊಲೀಸ್ ಕಮೀಷನರ್ ಸುಧೀರ್ ಕುಮಾರ್ ರೆಡ್ಡಿ ಅವರು, “ಇದು ಕುಟುಂಬದ ಆಂತರಿಕ ಕಲಹದಿಂದ ನಡೆದ ಘಟನೆಯಾಗಿದೆ. ಮೃತರ ಸ್ವಂತ ಸಹೋದರನೇ ಪ್ರಕರಣದ ಆರೋಪಿಯಾಗಿದ್ದು, ಆತನನ್ನು ಈಗಾಗಲೇ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ” ಎಂದು ತಿಳಿಸಿದ್ದಾರೆ.
Discover more from Coastal Times Kannada
Subscribe to get the latest posts sent to your email.








Discussion about this post