ಮಂಗಳೂರು: ‘ಈ ಬಾರಿಯ ಧರ್ಮ ಯುದ್ಧ ಆರಂಭಿಸುವ ಮುನ್ನ ಧರ್ಮಸ್ಥಳದ ಮಂಜುನಾಥನ ಹಾಗೂ ಅಣ್ಣಪ್ಪ ಸ್ವಾಮಿ ದರ್ಶನ ಪಡೆದು ಆಶೀರ್ವಾದ ಪಡೆಯುತ್ತಿದ್ದೇನೆ’ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಧರ್ಮಸ್ಥಳ ದೇವಸ್ಥಾನಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾತು ಬಿಡದ ಮಂಜುನಾಥ, ಕಾಸು ಬಿಡದ ತಿಮ್ಮಪ್ಪ ಎಂಬ ಮಾತಿದೆ. ನನ್ನನ್ನು ಮಂಜುನಾಥ, ಈಶ್ವರ, ಗಂಗಾಧರ ಅಜ್ಜ ರಕ್ಷಣೆ ಮಾಡಿಕೊಂಡು ಬಂದಿದ್ದಾರೆ. ಹೀಗಾಗಿ ಚುನಾವಣಾ ಯುದ್ಧವನ್ನು ಆರಂಭಿಸುವ ಮುನ್ನ ಮಂಜುನಾಥ ಸ್ವಾಮಿ, ಅಣ್ಣಪ್ಪಸ್ವಾಮಿ ದರ್ಶನ ಮಾಡಿ ಆಶೀರ್ವಾದ ಪಡೆದು ಹೋಗುವ ರೂಢಿ ಇಟ್ಟುಕೊಂಡಿದ್ದೇನೆ. ನಾನು ರೂಢಿ ಮಾಡಿಕೊಂಡಿರುವ ಪದ್ಧತಿಯಂತೆ ಧರ್ಮಸ್ಥಳಕ್ಕೆ ಬಂದಿದ್ದೇನೆ ಎಂದರು.
ಮಂಜುನಾಥ ಸ್ವಾಮಿ ಧರ್ಮಸ್ಥಳದ ಶಕ್ತಿ. ಆತ ಮಾತು ಬಿಡದ ಮಂಜುನಾಥ. ನಾವು ಪಂಚ ಗ್ಯಾರೆಂಟಿಗಳನ್ನು ನೀಡಿ ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ. ಇನ್ನೂ ಹೆಚ್ಚಿನ ಶಕ್ತಿ ನೀಡಿ ಎಂದು ಆ ದೇವರಲ್ಲಿ ಪ್ರಾರ್ಥಿಸಲು ಬಂದಿದ್ದೇನೆ. ನುಡಿದಂತೆ ನಡೆಯಲು ಆ ದೇವರು ಶಕ್ತಿ ಕೊಟ್ಟಿದ್ದಾನೆ, ಇದು ನಮ್ಮ ಭಾಗ್ಯ ಎಂದು ಹೇಳಿದ್ದಾರೆ. ‘ನಾವು ನಮ್ಮ ಕೆಲಸ ಮಾಡಿದ್ದೇವೆ. ಇದರ ಮೇಲೆ ಜನ ತೀರ್ಮಾನ ಮಾಡುತ್ತಾರೆ. ಮಹಿಳೆಯರು ಇಲ್ಲಿಗೆ ಉಚಿತವಾಗಿ ಬಸ್ನಲ್ಲಿ ಪ್ರಯಾಣ ಮಾಡಿ ಬರುತ್ತಿದ್ದಾರೆ. ಆ ಮೂಲಕ ತೀರ್ಥಯಾತ್ರೆ ಧರ್ಮ ಯಾತ್ರೆ ನಡೆಯುತ್ತಿದೆ. ಇದಕ್ಕೆ ಜನ ಕೊಟ್ಟ ಶಕ್ತಿ ಕಾರಣ. ನಾವು ಜನರ ಋಣ ತೀರಿಸಿದ್ದೇವೆ. ಜನರೂ ಕೂಡ ಉಪಕಾರ ಸ್ಮರಣೆ ಇಟ್ಟುಕೊಳ್ಳುವ ವಿಶ್ವಾಸವಿದೆ’ ಎಂದು ತಿಳಿಸಿದ್ದಾರೆ.
Discussion about this post