ಬೆಂಗಳೂರು, ಮಾ 28: ಈ ಬಾರಿ ದಕ್ಷಿಣ ಕನ್ನಡ ಲೋಕಸಭಾ ಟಿಕೆಟ್ ಕೈತಪ್ಪಿದ್ದರಿಂದ ಬೇಸರದಲ್ಲಿರುವ ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್ಗೆ ಹೈಕಮಾಂಡ್ ಮಹತ್ವದ ಜವಾಬ್ದಾರಿ ನೀಡಿದೆ. ಹೌದು.. ನಳಿನ್ ಕುಮಾರ್ ಕಟೀಲ್ ಅವರನ್ನು ಕೇರಳ ಲೋಕಸಭಾ ಚುನಾವಣೆಯ ಸಹ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ. ಇದರ ಜೊತೆ ತೆಲಂಗಾಣ ಮತ್ತು ಮಹಾರಾಷ್ಟ್ರ ಲೋಕಸಭಾ ಚುನಾವಣೆಯ ಉಸ್ತುವಾರಿಯನ್ನು ಕರ್ನಾಟಕದ ಬಿಜೆಪಿ ನಾಯಕರುಗಳಿಗೆ ನೀಡಲಾಗಿದೆ.
ಬಿಜೆಪಿ ಕಾರ್ಯಕರ್ತನಾಗಿ, ಸಂಸದನಾಗಿ, ಬಿಜೆಪಿ ರಾಜ್ಯಾಧ್ಯಕ್ಷರಾಗಿ ಪಕ್ಷದಲ್ಲಿ ಸೇವೆ ಸಲ್ಲಿಸಿರುವ ನಳೀನ್ ಕುಮಾರ್ ಕಟೀಲ್ಗೆ ಈ ಬಾರಿ ಕೇರಳ ಲೋಕಸಭಾ ಚುನಾವಣೆಯ ಸಹ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ. ಈ ಮೂಲಕ ಕೇರಳದಲ್ಲಿ ಕಮಲ ಅರಳಿಸಬೇಕು ಎನ್ನುವ ಬಹುದೊಡ್ಡ ಜವಾಬ್ದಾರಿಯನ್ನು ಬಿಜೆಪಿ ಹೈಕಮಾಂಡ್ ನಳೀನ್ ಕುಮಾರ್ ಕಟೀಲ್ಗೆ ನೀಡಿದೆ. ಈ ಬಾರಿ ದಕ್ಷಿಣ ಭಾರತ ರಾಜ್ಯಗಳ ಮೇಲೆ ಹೆಚ್ಚಿನ ಗಮನ ವಹಿಸಿರುವ ಬಿಜೆಪಿ ವರಿಷ್ಠರು ಶತಾಯಗಾತಾಯ ಹೆಚ್ಚಿನ ಸ್ಥಾನಗಳನ್ನು ಗೆಲ್ಲಬೇಕು ಎನ್ನುವ ಗುರಿಯಲ್ಲಿದ್ದಾರೆ. ಹೀಗಾಗಿ ಕೇರಳ ಜೊತೆಗೆ ತೆಲಂಗಾಣ ಮತ್ತು ಮಹಾರಾಷ್ಟ್ರ ಲೋಕಸಭಾ ಚುನಾವಣೆಯ ಉಸ್ತುವಾರಿಯನ್ನು ಕರ್ನಾಟಕದ ಬಿಜೆಪಿ ನಾಯಕರುಗಳಿಗೆ ನೀಡಲಾಗಿದೆ.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರಾಡಳಿತ ಪ್ರದೇಶಗಳಿಗೆ ಬಿಜೆಪಿ ಉಸ್ತುವಾರಿಗಳನ್ನು ಮತ್ತು ಸಹ ಉಸ್ತುವಾರಿಗಳನ್ನು ನೇಮಕ ಮಾಡಿದೆ. ಉತ್ತರ ಪ್ರದೇಶದ ಮಾಜಿ ಉಪಮುಖ್ಯಮಂತ್ರಿ ದಿನೇಶ್ ಶರ್ಮಾ ಅವರನ್ನು ಮಹಾರಾಷ್ಟ್ರದ ಚುನಾವಣಾ ಉಸ್ತುವಾರಿಯಾಗಿ ನೇಮಿಸಲಾಗಿದ್ದು, ಹರಿಯಾಣ ಬಿಜೆಪಿಯ ಮಾಜಿ ಮುಖ್ಯಸ್ಥ ಓಪಿ ಧನಕರ್ ಅವರನ್ನು ದೆಹಲಿಯ ಉಸ್ತುವಾರಿಗೆ ನೇಮಿಸಲಾಗಿದೆ. ಕರ್ನಾಟಕದ ಶಾಸಕ ಅಭಯ್ ಪಾಟೀಲ್ಗೆ ತೆಲಂಗಾಣಕ್ಕೆ ಮತ್ತು ಅವಿನಾಶ್ ರೈ ಖನ್ನಾ ಅವರನ್ನು ತ್ರಿಪುರಕ್ಕೆ ಚುನಾವಣಾ ಉಸ್ತುವಾರಿಯನ್ನಾಗಿ ಮಾಡಲಾಗಿದೆ. ಕರ್ನಾಟಕ ಬಿಜೆಪಿಯ ಮಾಜಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಕೇರಳದ ಸಹ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ. ಇನ್ನು ನಿರ್ಮಲ್ ಕುಮಾರ್ ಸುರಾನಾ ಅವರನ್ನು ಮಹಾರಾಷ್ಟ್ರ ಬಿಜೆಪಿ ಸಹ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ.
Discussion about this post